ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಅರ್ಜಿ ಸಲ್ಲಿಸಬಯಸುವವರು ನವೆಂಬರ್ 5 ರಿಂದ 15ರವರೆಗೆ ಅರ್ಜಿ ಹಾಕಬಹುದು. ಅರ್ಜಿಗೆ 5 ಸಾವಿರ ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ ಡಿಡಿ, ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು ಎಂದರು.
ಟಿಕೆಟ್ ಗಾಗಿ ಅರ್ಜಿ ಸಲ್ಲಿಸಬಯಸುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ.50ರಷ್ಟು ವಿನಾಯಿತಿ ನೀಡಲಾಗಿದೆ. ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ ಎಂದು ಹೇಳಿದರು.
2023ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಸಗಳು ಅರ್ಜಿ ಸಲ್ಲಿಸಬಹುದು. ನಾನೂ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅರ್ಜಿ ಹಾಕಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ತಿಳಿಸಿದರು.
ನವೆಂಬರ್ 6ರಂದು ಖರ್ಗೆ ರಾಜ್ಯಕ್ಕೆ ಆಗಮನ:-
ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ನವೆಂಬರ್ 6ರಂದು ಆಗಮಿಸಲಿದ್ದಾರೆ. ಅವರು ದೇಶದಲ್ಲಿ ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ನಮ್ಮ ರಾಜ್ಯಕ್ಕೆ ಆಗಮಿಸಬೇಕು ಎಂದು ಬಯಸಿದ್ದಾರೆ ಎಂದರು.
ನಾವೆಲ್ಲ ನಾಯಕರು ಚರ್ಚೆ ಮಾಡಿ ನವೆಂಬರ್ 6ರಂದು ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಅಂದು ಬೆಳಗ್ಗೆ 10.50 ಗಂಟೆಗೆ ಆಗಮಿಸಲಿದ್ದು ನಂತರ ಮಧ್ಯಾಹ್ನ 2.35ಕ್ಕೆ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.