ಸರ್ಕಾರಿ ಆಸ್ಪತ್ರೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದು, ಬಡರೋಗಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯವೆಂದು ತಿಳಿಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದರು.
ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಇರಬಹುದಾದ ಕುಂದು ಕೊರತೆಗಳು ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ದೂರುಗಳು ಬಂದಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ಲೋಪಗಳು ಉಂಟಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹೆರಿಗೆ ಸಲುವಾಗಿ ಆಸ್ಪತ್ರೆಗೆ ಬಂದು, ಸೇವೆ ಸಿಗದೆ, ಮರಣ ಹೊಂದಿದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಚಿವರು, ಇನ್ನು ಮುಂದೆ, ಇಂತಹ ಅಮಾನವೀಯ ಘಟನೆಗಳು ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ ಎಂದು ತಿಳಿಸಿದರು.
ವೈದ್ಯರು ಮತ್ತು ಸಿಬ್ಬಂದಿಗಳು ಸಾರ್ವಜನಿಕರ ಸೇವೆಗೆ ಸದಾ ಲಭ್ಯವಿದ್ದು, ಆಸ್ಪತ್ರೆಯ ಶುಚಿತ್ವ ಮತ್ತು ರೋಗಿಗಳ ಸಮಗ್ರ ಆರೈಕೆಗೆ ಗಮನ ನೀಡಿ ಶಿಸ್ತು-ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕು. ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಸರ್ಜನ್ ಡಾ. ವೀಣಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು ಮತ್ತಿತರರು ಇದ್ದರು.


