ಕೆಂಪೇಗೌಡರು ಭಾರತೀಯ ಜನತಾ ಪಕ್ಷದ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ, ನಮ್ಮೆಲ್ಲರ ಆರಾಧ್ಯ ದೈವ. ಇನ್ನು ಬೆಂಗಳೂರು ನಗರ ಸಮ್ಮೆಲ್ಲರದ್ದು, ಸಮಸ್ತ ಕನ್ನಡಿಗರ ಜೀವನಾಡಿ, ಈ ಸೂಕ್ಷವನ್ನು ರಾಜ್ಯ ಬಿಜೆಇ ಸರ್ಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಜಾತ್ಯತೀತ ಜನತಾ ಆಕ್ರೋಶ ವ್ಯಕ್ತಪಡಿಸಿದೆ.
ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಬೆನ್ನಲ್ಲೇ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ನಾಡಪ್ರಭು ಕೆಂಪೇಗೌಡರ ನೂರೆಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಇರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪಕ್ಷವು, ಬಿಜೆಪಿ ಸರ್ಕಾರ ಹಾಗೂ ಆ ಪಕ್ಷದ ನಾಯಕರ ವಿರುದ್ಧ ಕಿಡಿ ಕಾರಿದೆ. ಅಲ್ಲದೇ ಕೆಂಪೇಗೌಡರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜಕೀಯಕ್ಕೆ ಎಳೆದು ತಂದಿದೆ ಎಂದು ಟೀಕಿಸಿದೆ.
ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರವು ಆಹ್ವಾನ ನೀಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಪಕ್ಷ ಹೇಳಿದೆ.
ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ್ದ ಬಿಜೆಪಿ ಸರ್ಕಾರ ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ. ಯಾಕೆ ಎಂದು ಟ್ವೀಟ್ ಮಾಡಿ ಪ್ರಶ್ನೆ ಮಾಡಿದೆ.
ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದರೆ ಯಾರೂ ಪ್ರಶ್ನೆ ಮಾಢುತ್ತಿರಲಿಲ್ಲ. ಆದರೆ ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ರಾಜ್ಯ ಬಿಜೆಪಿ ಸರ್ಕಾರ ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಮತ್ತು ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ, ಇದು ಅಕ್ಷಮ್ಯದ ಪರಮಾವಧಿ ಎಂದು ಟೀಕಿಸಿದೆ.
ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಎಂದು ಹೇಳಿದೆ.