ವಿವೇಕ ಶಾಲಾ ಕೊಠಡಿಗಳ ನಿರ್ಮಾಣದ ಹೆಸರಿನಲ್ಲಿ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಕೇಸರಿಮಯಗೊಳಿಸಿ ಹೊಸ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಕೇಸರಿಕರಣವನ್ನು ಸಮರ್ಥಿಸಿಕೊಂಡಿದ್ದಾರೆ.
ಕಲಬುರಗಿ ತಾಲ್ಲೂಕಿನ ಮಡಿಯಾಳ್ ತಾಂಡಾದಲ್ಲಿ 7601 ತರಗತಿ ಕೊಠಡಿಗಳ ಕಾಮಗಾರಿಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ರಾಷ್ಟ್ರಧ್ವಜದಲ್ಲಿ ಕೇಸರಿ ಬಣ್ಣ ಇರುವಾಗ ಶಿಕ್ಷಣ ವ್ಯವಸ್ಥೆಯನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ರಾಜ್ಯದಲ್ಲಿ ನೂತನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ವಿವೇಕ ಎಂದು ನಾಮಕರಣ ಮಾಡುವುದನ್ನು ಸಮರ್ಥಿಸಿಕೊಂಡ ಬಸವರಾಜ ಬೊಮ್ಮಾಯಿ ತರಗತಿಯಲ್ಲಿ ಕುಳಿತ ವಿದ್ಯಾರ್ಥಿಗಳು ಉತ್ತಮ ಜ್ಞಾ ಪಡೆಯಲಿ ಎಂಬುದೇ ಸರ್ಕಾರದ ಉದ್ದೇಶವಾಗಿದೆ. ಮಹಾನ್ ಸಂತ ಸ್ವಾಮಿಗಳ ನಾಮಸ್ಮರಣೆ ಮಾಡಬೇಕು. ಎಲ್ಲದರಲ್ಲೂ ತಪ್ಪು ಹುಡುಕುವುದು ವಿರೋಧ ಪಕ್ಷಗಳ ಅಭ್ಯಾಸವಾಗಿದೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ಒಂದು ವರ್ಷದಲ್ಲಿ 8000 ತರಗತಿ ಕೊಠಡಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದು, ವರ್ಷಕ್ಕೆ 8000 ತರಗತಿ ಕೊಠಡಿಗಳನ್ನು ಒಂದೇ ಗುರಿಯೊಂದಿಗೆ ಇನ್ನೂ ಎರಡು ವರ್ಷಗಳವರೆಗೆ ಮುಂದುವರಿಸಬೇಕು. ಮೂರು ವರ್ಷಗಳ ಅವಧಿಯ ನಂತರ ಹೊಸ ತರಗತಿ ಕೊಠಡಿಗಳ ಅಗತ್ಯ ಬಹುತೇಕ ಈಡೇರಲಿದೆ ಎಂದು ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗ ಅಳವಡಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಮರ್ಥಿಸಿಕೊಂಡರು. ಯೋಗವು ಏಕಾಗ್ರತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಕ್ಕಳು ಆರೋಗ್ಯವಾಗಿದ್ದರೆ ಮಾತ್ರ ಚೆನ್ನಾಗಿ ಕಲಿಯಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.