ರಸ್ತೆಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಬಿಜೆಪಿ ಸರ್ಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ರಾಜ್ಯದ್ಯಂತ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಗೆ ಬಲಿ ಆಗುವ ಸರಣಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ. ಮಂಡ್ಯದಲ್ಲಿ ರಸ್ತೆಗೆ ನಿವೃತ್ತ ಯೋಧರೊಬ್ಬರು ಬಲಿಯಾಗಿರುವುದು ನನಗೆ ತೀವ್ರ ದುಃಖ ಉಂಟು ಮಾಡಿದ. ಕರ್ನಾಟಕದ ಕಳಪೆ ರಸ್ತೆಗಳಿಗೆ ಪರಿಹಾರವೇ ಇಲ್ಲವೇ ಎಂದು ಕಿಡಿಕಾರಿದ್ದಾರೆ.
ಸೇನೆಯಿಂದ ಇತ್ತೀಚೆಗಷ್ಟೇ ನಿವೃತ್ತರಾಗಿದ್ದ ಕುಮಾರ್ ಎಂಬ ಯೋಧರು ಮಂಡ್ಯದ ಕಾರಿಮನೆ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗೆ ರಸ್ತೆ ಗುಂಡಿಗೆ ಬಿದ್ದೊಡನೆ ಅವರ ಮೇಲೆ ಲಾರಿ ಹರಿದು ಕೊನೆಯುಸಿರೆಳೆದಿರುವುದು ಈ ವ್ಯವಸ್ಥೆಯ ಕರಾಳತೆಗೆ ಹಿಡಿದ ಕನ್ನಡಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್ ಅವರು ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು. ತಮ್ಮ ತಂದೆಯವರ ಜೊತೆ ಸಾತನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಆ ವೃದ್ಧ ತಂದೆಗೆ ಆಸರೆಯಾಗಿದ್ದ ಪುತ್ರ ಗುಂಡಿಯಿಂದ ಜೀವ ಕಳೆದುಕೊಂಡಿದ್ಉದ ಕರ್ನಾಟಕದ ಕಳಪೆ ರಸ್ತೆಗಳಿಗೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದ್ದಾರೆ.
ಕಣ್ಮುಂದೆಯೇ ಜೀವ ಬಿಟ್ಟ ಪುತ್ರನ ಪಾರ್ಥೀವ ಶರೀರದ ಮುಂದೆ ಗೋಳಾಡುತ್ತಿದ್ದ ಆ ವೃದ್ಧ ತಂದೆಯನ್ನು ಕಂಡು ನನ್ನ ಮನಸಿಗೆ ಆಘಾತವಾಗಿದೆ. ಇನ್ನೆಷ್್ಟು ತಂದೆ, ತಾಯಂದಿರು ಇಂಥ ಗುಂಡಿಗಳಿಂದ ಅನಾಥರಾಗಬೇಕು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಯೋಧರ ದುರಂತ ಸಾವಿಗೆ ಕಾರಣವಾದ ರಸ್ತೆಯೂ ಸೇರಿ ಮಂಡ್ಯ ನಗರಸಭೆ ವ್ಯಾಪ್ತಿಯ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿಗಳನ್ನು ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಡುಗಡೆ ಮಾಡಿದ್ದೆ. ದುರಂತ ಎಂದರೆ, ನನ್ನ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಆ 50 ಕೋಟಿ ರೂಪಾಯಿ ಹಣವನ್ನು ಕೂಡಲೇ ಹಿಂಪಡೆಯಿತು ಎಂದು ದೂರಿದ್ದಾರೆ.
ರಾಜಕೀಯ ಕಾರಣಕ್ಕೆ ಹಣ ವಾಪಸ್ ಪಡೆದ ರಾಜ್ಯ ಬಿಜೆಪಿ ಸರ್ಕಾರವು ರಸ್ತೆಗಳಲ್ಲಿ ಮುಗ್ದ ಜನರ ಹೆಣಗಳನ್ನು ನೋಡಿ ಮೆರೆಯುತ್ತಿದೆ. ಇದು ಅಮಾನುಷ. ಸರ್ಕಾರ ನೊಂದ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾಋ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ಸಿಗಲಿ, ದುಃಖತಪ್ತ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.
55


