ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತುಮಕೂರು ಜಿಲ್ಲೆಯಿಂದ ಸ್ಪರ್ಧಿಸಿದರೆ ಸಂತೋಷ ಎಂದು ಮಾಜಿ ಶಾಸಕ ಹಾಗು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು. ಈ ಹಿಂದೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದೆವು ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕುಗಳ 11 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಈ ಬಾರಿ ಗೆಲ್ಲುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
ಮಧುಗಿರಿ ಕ್ಷೇತ್ರದ ಜನ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಮಧುಗಿರಿ ಜಿಲ್ಲೆಯನ್ನಾಗಿ ಮಾಡಿಸಲು ಸರ್ಕಾರಕ್ಕೆ ಒತ್ತಡ ತರುತ್ತೇನೆ, 54 ಕೆರೆಗಳಿಗೂ ನೀರು ತುಂಬಿಸುತ್ತೇನೆ, ರೈಲ್ವೆ ಕಾಮಗಾರಿಗಳನ್ನು ಸಂಪೂರ್ಣ ಮಾಡಿಸಲು ಶ್ರಮವಹಿಸುತ್ತೇನೆ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಎಚ್.ನಿಂಗಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತ
ಮಾಜಿ ಶಾಸಕ ಎಚ್.ನಿಂಗಪ್ಪ ಕಾಂಗ್ರೆಸ್ ಪಕ್ಷವನ್ನು ಸೇರುವುದು ಬಹುತೇಕ ಖಚಿತವಾಗಿದೆ. ಆದರೆ ಅವರಿಗೆ ಟಿಕೆಟ್ ನೀಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಷಯ. ಈ ಬಗ್ಗೆ ನಾನೇನು ಹೇಳುವುದಿಲ್ಲ ಎಂದು ತಿಳಿಸಿದರು.


