ತುಮಕೂರಿನಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರು ಮಾಜಿ ಶಾಸಕ ಎಚ್.ನಿಂಗಪ್ಪ ಜೆಡಿಎಸ್ ಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತ ಎಂಬ ಹೇಳಿಕೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಎಚ್.ನಿಂಗಪ್ಪ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಎಚ್.ನಿಂಗಪ್ಪ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂದ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜಿನಾಮೆಗೆ ಕಾರಣಗಳನ್ನು ನೀಡಿದ್ದಾರೆ.
ನಾನು ಜಾತ್ಯತೀತ ಜನತಾದಳದ ಕಾರ್ಯಕರ್ತನಾಗಿದ್ದು ಹತ್ತು ವರ್ಷಗಳ ಕಾಲದ ಪಕ್ಷದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದ ಕಾರಣ ಪಕ್ಷಕ್ಕೆ ರಾಜಿನಾಮೆ ನೀಡಿದ್ದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತಮಗೆ ಮತ್ತೆ ಪಕ್ಷಕ್ಕೆ ಬರುವಂತೆ ತಿಳಿಸಿದರು. ಹಾಗಾಗಿ ಅವರ ಪ್ರೀತಿ ಮತ್ತು ವಿಶ್ವಾಸಕ್ಕೆ ಗೌರವ ನೀಡಿ ಪಕ್ಷಕ್ಕೆ ಸೇರ್ಪಡೆಯಾದೆ. ಆಗ ನಡೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದೆ. ಹಾಗಾಗಿ ಅಭ್ಯರ್ಥಿಯ ಗೆಲುವು ಸಾಧ್ಯವಾಯಿತು ಎಂದು ಹೇಳಿದ್ದಾರೆ.
ನನ್ನನ್ನು ಪಕ್ಷದ ಎಲ್ಲಾ ಚಟುವಟಿಕೆಗಳಿಂದ ದೂರ ಇಡಲಾಗಿತ್ತು. ಈಗಲೂ ನಾನು ಜೆಡಿಎಸ್ ಪಕ್ಷದಲ್ಲಿ ಇದ್ದೇನೆ ಎಂದು ಭಾವಿಸಿ ರಾಜಿನಾಮೆಯನ್ನು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಭದ್ರ ನೆಲೆಯಾಗಿತ್ತು. ಈಗ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಯ ನಡುವೆಯೇ ಎಚ್. ನಿಂಗಪ್ಪ ಜೆಡಿಎಸ್ ತೊರೆದಿರುವುದು ಜೆಡಿಎಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾದಂತೆ ಆಗಿದೆ.


