ಎಸ್ಸಿ/ಎಸ್ಟಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ಸರ್ಕಾರ ತನ್ನ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಮಹಿಳೆಯರು ಮತ್ತು ಅಲ್ಪಸಂಖ್ಯಾತರನ್ನು ತುಳಿದು ಆಳಬೇಕು ಎಂಬ ಬಿಜೆಪಿಯ ಅಜೆಂಡ ನಿಧಾನಕ್ಕೆ ಕಾರ್ಯಗತವಾಗುತ್ತಿದೆ. ನಾನು ಕಳೆದ ಕೆಲವು ವರ್ಷಗಳಿಂದ ಗಮನಿಸಿದಂತೆ ಮೋದಿಯವರ ಬಾಯಲ್ಲಿ ಹೇಳಿಸಿದ ಘೋಷಣೆಗಳಿಗೆ ವಿರುದ್ಧ ದಿಕ್ಕಿನಲ್ಲಿ ಸತ್ಯ ಹುದುಗಿರುತ್ತದೆ ಎಂದರು.
ಬಿಜೆಪಿಯವರು ಸಬ್ ಕಾ ವಿಕಾಸ್ ಎಂದರೆ ಅದು ದಲಿತ, ಹಿಂದುಳಿದವರು, ಮಹಿಳೆಯರು, ಅಲ್ಪಸಂಖ್ಯಾತರ ದಮನ ಎಂದು ಅರ್ಥ. ಬಹುಸಂಖ್ಯಾತರ ವಿನಾಶದ ಯೋಜನೆಗಳನ್ನು ರೂಪಿಸುವಾಗ ಸರ್ವರ ವಿಕಾಸ ಎಂದು ಸುಳ್ಳು ಹೇಳುತ್ತಾರೆ ಎಂದು ದೂರಿದರು.
ನಮ್ಮಲ್ಲಿ ಹೈಸ್ಕೂಲಿಗೆ ದಾಖಲಾಗುವವರ ಪ್ರಮಾಣ ಶೇ.75 ರಷ್ಟಿದೆ. ಅಂದರೆ ಶೇ.25 ರಷ್ಟು ಮಕ್ಕಳು ಶಾಲಾಶಿಕ್ಷಣದಿಂದ ಹೊರಗಿದ್ದಾರೆ ಎಂದರ್ಥ. ಮಕ್ಕಳಿಗೆ ಬಿಸಿಯೂಟ, ಸಮವಸ್ತ್ರ, ಶೂ, ಕೆನೆ ಭರಿತ ಹಾಲು, ಸೈಕಲ್ ಹೀಗೆ ವಿವಿಧ ಸೌಲಭ್ಯ ನೀಡಿ ಶಾಲೆಗೆ ಕರೆತಂದು ವಿದ್ಯಾಭ್ಯಾಸ ನೀಡಿ ದಮನಿತರ ಮಕ್ಕಳು ಉದ್ಧಾರವಾಗಲಿ ಎಂಬ ಉದ್ದೇಶದಿಂದ ಈ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಜೊತೆಯಲ್ಲಿ ಮಕ್ಕಳಿಗೆ ವಿದ್ಯಾರ್ಥಿ ವೇತನದ ವ್ಯವಸ್ಥೆಯೂ ಇತ್ತು ಎಂದು ಹೇಳಿದ್ದಾರೆ.
ಈ ವಿದ್ಯಾರ್ಥಿ ವೇತನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದ್ಯಾರ್ಥಿವೇತನಕ್ಕೆ ತಗುಲುವ ವೆಚ್ಚವನ್ನು ಶೇ. 75-25 ಪ್ರಮಾಣದಲ್ಲಿ ಹಂಚಿಕೊಳ್ಳುವುದು ಇಲ್ಲಿಯವರೆಗೂ ನಡೆದುಕೊಂಡು ಬಂದಿತ್ತು ಎಂದರು.
ಆದರೆ ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಈಗ ಏಕಾಏಕಿ ಒಂದರಿಂದ ಎಂಟನೇ ತರಗತಿವರೆಗಿನ ಬಡ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿ ಆದೇಶ ಹೊರಡಿಸಿರುವುದು ದಲಿತ- ಆದಿವಾಸಿ- ಹಿಂದುಳಿದ- ಅಲ್ಪಸಂಖ್ಯಾತ ವಿರೋಧಿ ಸಂವಿಧಾನ ದ್ರೋಹಿ ಕೃತ್ಯವಾಗಿದೆ ಎಂದು ಆಪಾದಿಸಿದರು.
ವಾರ್ಷಿಕ 2.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ದಮನಿತ ವರ್ಗಗಳ ಮಕ್ಕಳಿಗೆ ತಿಂಗಳಿಗೆ ತಲಾ 225ರೂ, ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳಿಗೆ ತಲಾ 525ರೂ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿತ್ತು. ಪುಸ್ತಕ, ಪೆನ್ನು ಇತ್ಯಾದಿ ಶಿಕ್ಷಣ ಸಂಬಂಧಿತ ಉಪಕರಣಗಳನ್ನು ಖರೀದಿಸಲು ನೀಡುವ ನೆರವು ಇದು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ತಲಾ 750 ರಿಂದ 1000ರೂ ಮಾತ್ರ ವಿದ್ಯಾರ್ಥಿವೇತನದ ರೂಪದಲ್ಲಿ ನೀಡಲಾಗುತ್ತಿತ್ತು. ಕಾರ್ಪೋರೇಟ್ ವಂಚಕರ ಸಹಸ್ರಾರು ಕೋಟಿ ಸಾಲದ ಹಣವನ್ನು ಕ್ಷಣ ಮಾತ್ರದಲ್ಲಿ ಮಾಫಿ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅತ್ಯಂತ ಸಣ್ಣ ಪ್ರಮಾಣದ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿರುವುದರ ಹಿಂದೆ ಮನುಸ್ಮೃತಿ ಪ್ರೇರಿತ ತಾರತಮ್ಯ ಸಿದ್ಧಾಂತವನ್ನು ಜಾರಿ ಮಾಡುವ ಮನಸ್ಥಿತಿ ಕೆಲಸ ಮಾಡುತ್ತಿದೆ.


