ಉಪನ್ಯಾಸಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದು ಆತ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಪ್ರಕರಣ ತುಮಕೂರಿನ ದೇವರಾಯನದುರ್ಗದಲ್ಲಿರುವ ನವೋದಯ ಶಾಲೆಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
ಉಪನ್ಯಾಸಕರ ಹೊಡೆತಕ್ಕೆ ವಿದ್ಯಾರ್ಥಿ ಪ್ರಜ್ಞೆ ತಪ್ಪಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತುಮಕೂರು ತಾಲ್ಲೂಕು ಹೆಬ್ಬೂರು ಭಾಗದ ವಿದ್ಯಾರ್ಥಿಗೆ ಉಪನ್ಯಾಸಕರು ಥಳಿಸಿರುವುದು ಗೊತ್ತಾಗುತ್ತಿದ್ದಂತೆ ಪೋಷಕರು ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿಗೆ ಥಳಿಸಿರುವ ಉಪನ್ಯಾಸಕರನ್ನು ಕರೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಪೋಷಕರು ಪ್ರಾಂಶುಪಾಲರಿಗೆ ಮುತ್ತಿಗೆ ಹಾಕಿ ಒತ್ತಾಯಿಸಿದರು ಎಂದು ತಿಳಿದುಬಂದಿದೆ.
ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿರುವ ಉಪನ್ಯಾಸಕರ ವಿರುದ್ಧ ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಪೋಷಕರೆಲ್ಲಾ ಸೇರಿ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.
ಸದರಿ ಉಪನ್ಯಾಸಕ ಈ ಹಿಂದೆ ಇದ್ದ ಶಾಲೆಯಲ್ಲೂ ವಿದ್ಯಾರ್ಥಿಗಳಿಗೆ ಥಳಿಸಿದ ಕಾರಣವನ್ನು ಮುಂದಿಟ್ಟುಕೊಂಡು ತುಮಕೂರಿನ ನವೋದಯ ಶಾಲೆಗೆ ವರ್ಗಾವಣೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.


