ತುಮಕೂರು ವಿಶ್ವವಿದ್ಯಾಲಯದ ಕುಲಸಚಿವ ಡಾ ಶಿವಚಿತ್ತಪ್ಪ ಅವರನ್ನು ಬದಲಾಯಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ತೀವ್ರವಾಗಿ ಖಂಡಿಸಿದೆ.
ವಿಶ್ವವಿದ್ಯಾಲಯದಲ್ಲಿ ಕುಲಸಚಿವರ ನೇಮಕಾತಿಯನ್ನು ವಿವಿ ಕಾಯ್ದೆ ಅಡಿಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಅಡಿಯಲ್ಲಿ ಅವರ ಸೇವೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಶಿವಚಿತ್ತಪ್ಪ ಅವರನ್ನು ಒಂದು ವರ್ಷದ ಹಿಂದೆ ನೇಮಕ ಮಾಡಿ ಅವಧಿಗೂ ಮೊದಲೇ ಅವರನ್ನು ಕುಲಸಚಿವ ಹುದ್ದೆಯಿಂದ ಬದಲಾವಣೆ ಮಾಡಿದೆ. ಇದು ವಿವಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಆಗಿದೆ ಎಂದು ಎಸ್.ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ಆರೋಪಿಸಿದರು.
ರಾಜ್ಯ ಸರ್ಕಾರ ಡಿಸೆಂಬರ್ 1ರಂದು ದಿಢೀರ್ ಎಂದು ಶಿವಚಿತ್ತಪ್ಪ ಅವರನ್ನು ಕುಲಸಚಿವ ಹುದ್ದೆಯಿಂದ ಬದಲಾವಣೆ ಮಾಡಲಾಗಿದೆ. ಯಾವುದೇ ಅನುಭವ ಇಲ್ಲದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಮ್ ಜಮ್ ಅವರನ್ನು ಕುಲಸಚಿವರನ್ನಾಗಿ ನೇಮಕ ಮಾಡಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರವು ಈವರೆಗೆ ಯಾವುದೇ ಸಮಸ್ಯೆಗಳಿಲ್ಲದೆ ಕೆಲಸ ನಿರ್ವಹಿಸಿದ ಶಿವಚಿತ್ತಪ್ಪ ಅವರನ್ನೇ ಕುಲಸಚಿವ ಹುದ್ದೆಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಮ್ಮಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಆದೇಶವನ್ನು ಕೂಡಲೇ ರದ್ದು ಮಾಡಿ, ಈವರೆಗೆ ಇದ್ದ ಕುಲಸಚಿವರನ್ನು ವಿವಿ ಅಭಿವೃದ್ಧಿ ದೃಷ್ಟಿಯಿಂದ ಮುಂದುವರೆಸಬೇಕೆಂದು ಒತ್ತಾಯಿಸಿದ್ದಾರೆ.


