ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿದೆ.
ಪಕ್ಷದ ಮುಖಂಡರೊಂದಿಗೆ ಫ್ರೀಡಂ ಪಾರ್ಕ್ಗೆ ತೆರಳಿದ ರಾಜ್ಯ ಎಎಪಿ ಉಪಾಧ್ಯಕ್ಷ ಭಾಸ್ಕರ್ ರಾವ್ ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಶೀಘ್ರವೇ ಎನ್ಪಿಎಸ್ ರದ್ದುಪಡಿಸಿ, ಒಪಿಎಸ್ ಜಾರಿಗೆ ತರುವುದಾಗಿ ಘೋಷಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು , ಅಧಿಕಾರ ಸಿಕ್ಕರೆ ಒಪಿಎಸ್ ಜಾರಿಗೆ ತರುವುದಾಗಿ ಪಂಜಾಬ್ ಚುನಾವಣೆ ವೇಳೆ ಆಮ್ ಆದ್ಮಿ ಪಾರ್ಟಿಯು ಗ್ಯಾರೆಂಟಿ ನೀಡಿತ್ತು. ಅದರಂತೆ ಅಲ್ಲಿನ ಸಚಿವ ಸಂಪುಟವು ಒಪಿಎಸ್ ಜಾರಿಗೆ ನವೆಂಬರ್ ತಿಂಗಳಿನಲ್ಲಿ ಅನುಮೋದನೆ ನೀಡಿ, ಸರ್ಕಾರವು ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ ಎಂದರು.
ಗುಜರಾತ್ನಲ್ಲಿ ಕೂಡ ಒಪಿಎಸ್ ಜಾರಿ ಕುರಿತು ಎಎಪಿ ಗ್ಯಾರೆಂಟಿ ನೀಡಿತ್ತಾದರೂ ಅಲ್ಲಿ ಪಕ್ಷ ಅಧಿಕಾರಕ್ಕೆ ಬರಲಿಲ್ಲ. ಕರ್ನಾಟಕದಲ್ಲಿ ನಾವು ಅಧಿಕಾರಕ್ಕೆ ಬಂದರೆ ಒಪಿಎಸ್ ಜಾರಿಗೆ ತರಲು ಬದ್ಧರಾಗಿದ್ದೇವೆ. ಚುನಾವಣಾ ಪ್ರಣಾಳಿಕೆ ಹಾಗೂ ಜನರಿಗೆ ನೀಡುವ ಗ್ಯಾರೆಂಟಿ ಕಾರ್ಡ್ನಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸುತ್ತೇವೆ. ಎಎಪಿಯು ಸರ್ಕಾರಿ ನೌಕರರ ಹಿತ ಕಾಪಾಡಲು ಸದಾ ಬದ್ಧವಾಗಿರುತ್ತದೆ ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿ ಮುಖಂಡ ಬ್ರಿಜೇಶ್ ಕಾಳಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳಿಗೆ ಬಂಡವಾಳಶಾಹಿ ಉದ್ಯಮಿಗಳು ಮಾತ್ರ ಮುಖ್ಯವಾಗಿದ್ದಾರೆ. ನೌಕರರು, ಕಾರ್ಮಿಕರು, ರೈತರು, ಸಣ್ಣಪುಟ್ಟ ಉದ್ದಿಮೆದಾರರು ಸೇರಿದಂತೆ ಜನಸಾಮಾನ್ಯರ ಅಗತ್ಯಗಳು ಬಿಜೆಪಿ ಸರ್ಕಾರಗಳಿಗೆ ಲೆಕ್ಕಕ್ಕೇ ಇಲ್ಲ. ಇಷ್ಟು ದಿನ ಬೇರೆಬೇರೆ ವರ್ಗದ ಜನರು ಪ್ರತಿಭಟನೆ ನಡೆಸುತ್ತಿದ್ದು, ಈಗ ಸರ್ಕಾರಿ ನೌಕರರೇ ಬೀದಿಗಿಳಿಯುವ ಸ್ಥಿತಿ ಬಂದಿದೆ ಎಂದರು.