ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತ ಮೂಡಿಸಿ ಅಭ್ಯರ್ಥಿ ಆಯ್ಕೆಗಾಗಿ ಅರ್ಜಿಗಳನ್ನು ಸ್ಥಳೀಯ ಜಿಲ್ಲೆಗಳಿಗೆ ರವಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಇರುತ್ತಾರೆ. ಬೇರೆ ಪಕ್ಷಗಳು ಸೋಲುತ್ತವೆ ಎಂದು ಆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಕಡಿಮೆ ಇದ್ದಾರೆ. ಕಾಂಗ್ರೆಸ್ ಗೆಲ್ಲುವ ಸೂಚನೆ ಸಿಕ್ಕಿರುವುದರಿಂದ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ನಮ್ಮ ನಾಯಕರು ಈ ವಿಚಾರವಾಗಿ ಮಾತನಾಡಿದ್ದಾರೆ. ಉಳಿದಂತೆ ಯಾರೂ ಬಂದು ನಮ್ಮ ಬಳಿ ಚರ್ಚೆ ಮಾಡಿಲ್ಲ. ಸರ್ಕಾರ ಮೊದಲು ನಿಲುವು ಪ್ರಕಟಿಸಲಿ. ಕಾನೂನು ಅಡಚಣೆಗಳೇನು ಎಂಬುದು ಗೊತ್ತಿಲ್ಲ. ಈ ವಿಚಾರವಾಗಿ ಆಡಳಿತ ಪಕ್ಷ ತೀರ್ಮಾನ ಮಾಡಬೇಕು ಎಂದು ಹೇಳಿದರು.
ಮೀಸಲಾತಿ ಹೆಚ್ಚಳ ಮಾಡುವಂತೆ ಬಹಳ ಸಮಾಜಗಳು ಒತ್ತಾಯ ಮಾಡುತ್ತಿವೆ. ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಕುರುಬರು ಹೋರಾಟ ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳದ ವಿಚಾರವಾಗಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಆದರೆ 50ರಷ್ಟು ಮಿತಿ ಮೀರಿ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯಸಭೆಯಲ್ಲಿ ಸಚಿವರು ಉತ್ತರ ನೀಡಿದ್ದಾರೆ. ಹೀಗೆ ಮೀಸಲಾತಿ ವಿಚಾರ ಗೊಂದಲದ ಗೂಡಾಗಿದೆ. ಹೀಗಾಗಿ ಕಾನೂನು ಅಂಶಗಳನ್ನು ಅರಿಯಲು ಎಐಸಿಸಿಯಿಂದ ಒಂದು ಸಮಿತಿ ಮಾಡಲಾಗಿದೆ. ನಾವೆಲ್ಲ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ ಎಂದರು.
ಮೀಸಲಾತಿ ಹೆಚ್ಚಳ ಮಸೂದೆ ಮಂಡನೆಗೆ ಸಂಬಂಧಿಸಿದಂತೆ ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದೆ. ಅವರಿಗೆ ನಿಜಕ್ಕೂ ಕಾಳಜಿ ಇದ್ದಿದ್ದರೆ ಸಂಸತ್ತಿನಲ್ಲಿ ಮಸೂದೆ ಮಂಡಿಸಿ, ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಿ ತಿದ್ದುಪಡಿ ತರಲಿ. ಅದನ್ನು ಮಾಡದೇ ಇಲ್ಲಿ ಏನೇ ಮಾಡಿದರೂ ಪ್ರಯೋಜನವಿಲ್ಲ. ಇಲ್ಲಿ ಕಾನೂನು ತರುತ್ತಿದ್ದೇವೆ ಎಂದು ಹೇಳುತ್ತಾರೆ ಎಂದು ತಿಳಿಸಿದ್ದಾರೆ.
ಹೇಗಿದ್ದರೂ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಈ ಕಾನೂನನ್ನು ಅಲ್ಲಿಗೆ ಕಳುಹಿಸಿ, ಅನುಮೋದನೆ ಪಡೆಯಲಿ. ಆತುರದಲ್ಲಿ ನಾವು ಮಾಡಿದ್ದೇವೆ ಎಂದು ತೋರಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾಋಎ. ಈ ಮೀಸಲಾತಿ ಹೆಚ್ಚಳ ವಿಚಾರವಾಗಿ ನಾಗಮೋಹನ್ ದಾಸ್ ಸಮಿತಯನ್ನು ರಚನೆ ಮಾಡಿದ್ದು ನಾವು ಎಂದು ಉತ್ತರಿಸಿದರು.


