ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ. ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸತತ ಹದಿಮೂರು ವರ್ಷಗಳ ಕಾಲ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಗಳು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಪ್ರಕೃತಿಯ ಹಿರಿಮೆಗಳನ್ನು ಪ್ರದರ್ಶಿಸಿ ಇಡೀ ದೇಶದ ಶ್ಲಾಘನೆಗೆ ಪಾತ್ರವಾಗಿದೆ. ಇದೇ ಮೊದಲ ಬಾರಿ ಬಿಜೆಪಿ ಈ ಗೌರವಕ್ಕೆ ಧಕ್ಕೆ ತಂದಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರದ ಎದುರು ಮಾಂಡಲೀಕರಂತೆ ವರ್ತಿಸುತ್ತಿರುವ ಕರ್ನಾಟಕದ ಬಿಜೆಪಿ ನಾಯಕರು ರಾಜ್ಯದ ಘನತೆ-ಗೌರವಗಳನ್ನು ದೆಹಲಿ ನಾಯಕರಿಗೆ ಅಡ ಇಟ್ಟಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.
ಮಾತು ಮಾತಿಗೆ ಡಬಲ್ ಎಂಜಿನ್ ಸರ್ಕಾರ ಎಂದು ರಾಜ್ಯದ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದ ಹಕ್ಕು ಮತ್ತು ಗೌರವದ ಪ್ರಶ್ನೆ ಎದುರಾದಾಗ ಮಾತ್ರ ಕರ್ನಾಟಕದ ಎಂಜಿನ್ ಗುಜರಿ ಆಗುತ್ತದೆ ಎಂದು ಟೀಕಿಸಿದ್ದಾರೆ.


