ತುಮಕೂರಿನಲ್ಲಿ ಜನವರಿ 24ರಂದು ಪ್ರಜಾಧ್ವನಿ ಬಸ್ ಯಾತ್ರೆಯನ್ನು ಕೈಗೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ದುರಾಡಳಿತವನ್ನು ಜನತೆಗೆ ತಿಳಿಸುವುದೇ ಪ್ರಜಾಧ್ವನಿ ಬಸ್ ಯಾತ್ರೆಯ ಉದ್ದೇಶವಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪ್ರಜಾಧ್ವನಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ಹಲವು ಕಡೆ ಈಗಾಗಲೇ ಪ್ರಜಾಧ್ವನಿ ಬಸ್ ಯಾತ್ರೆ ನಡೆಸಲಾಗಿದೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗೆಯೇ ತುಮಕೂರಿನಲ್ಲೂ ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲಾ 11 ಕ್ಷೇತ್ರಗಳಲ್ಲು ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಚಿತ್ರದುರ್ಗದಲ್ಲಿ ನಡೆದ ಐಕ್ಯತಾ ಸಮಾವೇಶ ಹಾಗೂ ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ರಾಜ್ಯಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದ್ದೇವೆ. ಪ್ರಜಾಧ್ವನಿ ಕಾರ್ಯಕ್ರಮದ ಮೂಲಕ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಸಂದೇಶವನ್ನು ತುಮಕೂರಿನಿಂದಲೇ ಕಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ನಡೆಸಿದ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಈ ಬಾರಿಯೂ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ನೀಡಲಿದ್ದಾರೆ. ಪ್ರಜಾಧ್ವನಿ ಬಸ್ ಯಾತ್ರೆಯ ಮೂಲಕ ಬಿಜೆಪಿಯ ದುರಾಡಳಿತವನ್ನು ಜನತೆಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು.
ನಾವು ಅಧಿಕಾರಕ್ಕೆ ಬಂದರೆ ಚಿತ್ರದುರ್ಗದ ಐಕ್ಯತಾ ಸಮಾವೇಶದಲ್ಲಿ ಘೋಷಿಸಿದಂತೆ 1 ರಿಂದ 5ನೇ ತರಗತಿ ಮಕ್ಕಳಿಗೆ ಮಾಸಿಕ 150 ರೂಪಾಯಿ ಮತ್ತು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 300 ರೂಗಳನ್ನು ನೀಡುತ್ತೇವೆ. ಹಾಗೆಯೇ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ. ನಾ ನಾಯಕಿ ಕಾರ್ಯಕ್ರಮದಲ್ಲಿ ಘೋಷಿಸಿದಂತೆ ಪ್ರತಿ ಕುಟುಂಬದ ಮಹಿಳೆಗೆ 2000 ರೂಪಾಯಿ ನಗದು ನೀಡುತ್ತೇವೆ ಎಂದು ಹೇಳಿದರು.
ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ಡಾ. ರಫೀಕ್ ಅಹಮದ್, ಕೆ.ಷಡಕ್ಷರಿ, ಜಿಲ್ಲಾ ಉಸ್ತುವಾರಿಗಳಾದ ಮಂಜುಳ ನಾಯ್ಡು, ವೇಣುಗೋಪಾಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ಇತರರು ಇದ್ದರು.


