ರಾಜ್ಯದ ಬಿಜೆಪಿ ಸರ್ಕಾರ ಧರ್ಮದ ರಾಜಕಾರಣ ಮಾಡುತ್ತಿದ್ದು ಜನರನ್ನು ಬೀದಿಗೆ ತಳ್ಳುತ್ತಿದೆ. ಹಾಗಾಗಿ ನಾವು ಹೋರಾಟದ ಮೂಲಕ ರಾಜ್ಯ ಸರ್ಕಾರವನ್ನು ಎಬ್ಬಿಸಬೇಕಾಗಿದೆ ಎಂದು ಸಿಐಟಿಯು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಹೇಳಿದರು.
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನದ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದ ಜನರು ಬೀದಿಗೆ ಬಿದ್ದಿದ್ದಾರೆ. ಜನರನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಕಾರ್ಮಿಕರು, ಯುವಕರು ಉದ್ಯೋಗವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಎಲ್ಲವನ್ನು ಖಾಸಗೀಕರಣ ಮಾಡುವ ಮೂಲಕ ಸರ್ಕಾರಗಳು ಬಂಡವಾಳದಾರರ ಪರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಅಂಗನವಾಡಿ ನೌಕರರ ಹೋರಾಟ ನಡೆಯುತ್ತಿದೆ. ಸರ್ಕಾರ ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಎಲ್ಲಿಯವರೆಗೂ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದಿಲ್ಲವೋ ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ರೈತ-ಕಾರ್ಮಿಕರ ಹಕ್ಕುಗಳಿಗಾಗಿ ಮುಂದಿನ ಹೋರಾಟದ ಪೂರ್ವಭಾವಿಯಾಗಿ ಗಾಂಧೀಜಿ ಹುತಾತ್ಮ ದಿನದಂದು ಬೃಹತ್ ಸಮಾವೇಶ ದೆಹಲಿಯಲ್ಲಿ ಏರ್ಪಡಿಸಲಾಗಿದೆ. ಎಲ್ಲರೂ ಮುಂಬರುವ ಪ್ರತಿಭಟನೆಗೆ ಸಹಕರ ನೀಡಬೇಕು ಎಂದು ತಿಳಿಸಿದರು.
ಕೋಮುವಾದಿಗಳು ಜನರ ಮಧ್ಯೆ ವಿಷಬೀಜ ಬಿತ್ತುತ್ತಿದ್ದಾರೆ. ರಾಜಕೀಯ ಇಚ್ಚಾಶಕ್ತಿ ಮೂಲಕ ಜನರನ್ನು ವಿಭಜಿಸಲಾಗುತ್ತಿದೆ. ಇದರ ವಿರುದ್ಧ ಮನೆ ಮನೆಗೆ ತೆರಳಿ ಜನರನ್ನು ಜಾಗೃತಿ ಮೂಡಿಸುವ ಕೆಲಸ ಸಿಐಟಿಯು ಕೆಲಸ ಮಾಡಬೇಕಿದೆ. ಈ ಕೋಮುವಾದಿಗಳನ್ನು ಸೋಲಿಸಿ ಮನೆಗೆ ಕಳುಹಿಸಬೇಕು ಎಂದು ಕರೆ ನೀಡಿದರು.