ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2024ರ ಲೋಕಸಭಾ ಚುನಾವಣೆಗೂ ಮೊದಲು ದೇಶದ 12 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.
ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮತ್ತು ಲಡಾಖ್ ಲೆಫ್ಟಿನೆಂಟ್ ಗವರ್ನರ್ ಕೃಷ್ಣನ್ ಮಾಥುರ್ ಅವರ ರಾಜಿನಾಮೆಯನ್ನು ಅಂಗೀಕರಿಸಿದ ಬಳಿಕ ರಾಜ್ಯಪಾಲರ ನೇಮಕ ಮಾಡಲಾಗಿದೆ.
ರಾಷ್ಟ್ರಪತಿ ಸಚಿವಾಲಯ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ ಅವರನ್ನು ಅರುಣಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಸಿ.ಪಿ.ರಾಧಾಕೃಷ್ಣನ್ ಅವರನ್ನು ಜಾರ್ಖಂಡ್ ರಾಜ್ಯಪಾಲರನ್ನಾಗಿ ಮತ್ತು ಶಿವಪ್ರತಾಪ್ ಶುಕ್ಲಾ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಿದೆ.
ಗುಲಾಬ್ ಚಂದ್ ಕಟಾರಿಯಾ ಅವರನ್ನು ಅಸ್ಸಾಂನ ಹೊಸ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಾಗೆಯೇ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ಹೊಸ ರಾಜ್ಯಪಾಲರನ್ನಾಗಿ ನೇಮಿಸಿದೆ.
ರಾಷ್ಟ್ರಪತಿಗಳು ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಅವರನ್ನು ಛತ್ತೀಸಸ್ ಗಢದ ಹೊಸ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ಛತ್ತಿಸ್ ಗಢದ ರಾಜ್ಯಪಾಲ ಸುಶ್ರೀ ಅನುಸೂಯಾ ಅಯಿಕ್ಯೆ ಅವರನ್ನು ಮಣಿಪುರದ ರಾಜ್ಯಪಾಲರಾಗಿ ನೇಮಕ ಮಾಡಿದೆ.
ಮಣಿಪುರದ ರಾಜ್ಯಪಾಲ ಗಣೇಶನ್ ಅವರನ್ನು ನಾಗಾಲ್ಯಂಡ್ ನ ಹೊಸ ರಾಜ್ಯಪಾಲರನ್ನಾಗಿ ಮತ್ತು ಬಿಹಾರದ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಬಿಹಾರದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.


