ಉದ್ಯಮಿ ಗೌತಮ್ ಅದಾನಿ ಅವ್ಯವಹಾರಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ ಎಂದು ಆರೋಪಿಸಿ ಬೆಂಗಳೂರಿನ ಬಿಜೆಪಿ ಕಚೇರಿ ಎದುರು ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ದೇಶವೆಂದರೆ ನಮ್ಮೆಲ್ಲರಿಗೂ ತಾಯಿ. ತಾಯಿಯ ಸಂಪನ್ಮೂಲವನ್ನು ಬಿಜೆಪಿಯು ಒಬ್ಬ ವ್ಯಕ್ತಿಗೆ ಮಾರಾಟ ಮಾಡಿದೆ. ನಮ್ಮ ದೇಶದ ಕಲ್ಲಿದ್ದಲು, ಗ್ಯಾಸ್, ವಿದ್ಯುತ್, ರಸ್ತೆ, ನೀರು, ವಿಮಾನ ನಿಲ್ದಾಣ, ಬಂದರು ಮುಂತಾದವುಗಳನ್ನೆಲ್ಲ ಅದಾನಿ ಪಾಲಾಗುವಂತೆ ಮಾಡಿದ್ದಾರೆ ಎಂದು ದೂರಿದರು.
ದೇಶದಲ್ಲಿ ಆರ್ಥಿಕ ಆತಂಕ ಎದುರಾಗಿದೆ. ಇದು ಹೀಗೆ ಮುಂದುವರೆದರೆ ಭಾರತ ಮಾತೆಗೆ ಜೈ ಎನ್ನುವ ಬದಲು ಅದಾನಿಗೆ ಜೈ ಎಂದು ಹೇಳಬೇಕೆಂದು ಅವರು ನಮಗೆ ಆದೇಶಿಸುವ ದಿನ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ಉದ್ಯಮಿಯ ಪರವಾಗಿ ನಿಂತಿದ್ದಾರೆ. ಅದಾನಿ ವಿರುದ್ಧದ ಎಲ್ಲಾ ಆರೋಪಗಳ ಬಗ್ಗೆ ಜಂಟಿ ಸದನ ಸಮಿತಿಯ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಅದಾನಿ ಆಸ್ತಿಯು 2014ರಲ್ಲಿ 37,000 ಕೋಟಿ ರೂಪಾಯಿ, 2018ರಲ್ಲಿ 59,000 ಕೋಟಿ ರೂಪಾಯಿ ಇತ್ತು. ಅದು 2020ರಲ್ಲಿ 2.5 ಲಕ್ಷ ಕೋಟಿ ರೂಪಾಯಿಗೆ ತಲುಪಿತು. 2022ರಲ್ಲಿ 13 ಲಕ್ಷ ಕೋಟಿ ರೂಪಾಯಿಗೂ ಅಧಿಕವಾಗಿದೆ ಎಂದು ಹೇಳಿದರು.


