ಕನ್ನಡಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಕನ್ನಡ ಸೇನೆಯ ಅಧ್ಯಕ್ಷ ಧನಿಯಾಕುಮಾರ್ ಅವರಿಗೆ ಜೆಡಿಎಸ್ ಪಕ್ಷದಿಂದ ತುಮಕೂರು ನಗರ ಕ್ಷೇತ್ರಕ್ಕೆ ಟಿಕೇಟ್ ನೀಡುವಂತೆ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಮನವಿ ಮಾಡಲಾಯಿತು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡಪರ ಸಂಘಟನೆಗಳ ಮುಖಂಡರಾದ ವೆಂಕಟಾಚಲ, ಶ್ರೀಧರ್, ಗುರು, ಅನಿಲ್, ಧನಿಯಾಕುಮಾರ್ ಕಳೆದ 40 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಅವರಿಗೆ ತುಮಕೂರು ನಗರ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಆಗ್ರಹ ಮಾಡಲಾಯಿತು.
ಧನಿಯಾಕುಮಾರ್ ಅವರು ಕನ್ನಡ ಸೇನೆ ಜಿಲ್ಲಾಧ್ಯಕ್ಷರಾಗಿ, ಎಪಿಎಂಸಿ ನಿರ್ದೇಶಕರಾಗಿ, ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾಗಿ ಹಿಂದುಳಿದ ವರ್ಗಗಳ ಒಕ್ಕೂಟದ ಆಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕಲೆ, ಸಾಹಿತ್ಯ, ಕ್ರೀಡೆ, ಹೋರಾಟ ಎಲ್ಲಾ ಕ್ಷೇತ್ರಗಳಲ್ಲಿಯೂ ಭಾಗಿಯಾಗಿ ಮುಂಚೂಣಿಯಲ್ಲಿದ್ದಾರೆ. ಅವರಿಗೆ ಟಿಕೆಟ್ ನೀಡಬೇಕು ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದಿಂದ ಕನ್ನಡಪರ ಹೋರಾಟಗಾರರಿಗೆ ಟಿಕೇಟ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗಾಗಿ ಧನಿಯಾ ಕುಮಾರ್ ಅವರಿಗೆ ಟಿಕೆಟ್ ನೀಡಿದರೆ ಅನುಕೂಲವಾಗಲಿದೆ ಎಂದರು.
ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ಕೂಡ ಕನ್ನಡ ಪರ ಹೋರಾಟಗಾರರಿಗೆ ಇಂತಿಷ್ಟು ಸೀಟುಗಳನ್ನು ಮೀಸಲಿಡಬೇಕು. ಹೋರಾಟಗಾರರು ಕಾಯ್ದೆ ಮಾಡುವ ಜಾಗದಲ್ಲಿ ಹೆಚ್ಚು ಕನ್ನಡಪರ ಕಾಯ್ದೆಗಳು ಜಾರಿಗೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಟಿಕೇಟ್ ನೀಡಿದರೆ ರಾಜ್ಯದೆಲ್ಲೆಡೆ ಜೆಡಿಎಸ್ ಗೆ ಬೆಂಬಲ: ಧನಿಯಾಕುಮಾರ್
ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಡಿರುವ ಮಾತಿನಂತೆ ಕನ್ನಡಪರ ಸಂಘಟನೆಗಳ 6 ಮಂದಿ ಮುಖಂಡರಿಗೆ 6 ಮಂದಿಗೆ ಟಿಕೆಟ್ ನೀಡಿದರೆ ರಾಜ್ಯಾದ್ಯಂತ ಜೆಡಿಎಸ್ ಗೆ ಬೆಂಬಲ ನೀಡುತ್ತೇವೆ ಎಂದು ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ತಿಳಿಸಿದರು.

ದಿ ನ್ಯೂಸ್ ಕಿಟ್.ಇನ್ ಜೊತೆಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಒಂದು ವರ್ಷದ ಹಿಂದೆಯೇ ಸಭೆಯೊಂದನ್ನು ಮಾಡಿ ಇದರ ಬಗ್ಗೆ ಚರ್ಚೆ ನಡೆಸಿದ್ದರು. ಕನ್ನಡಪರ ಸಂಘಟನೆಗಳ ಮುಖಂಡರಿಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು. ನೆಲ, ಜಲ, ಭಾಷೆ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ ಮತ್ತು ಕನ್ನಡ ಅಂದರೆ ಬಿಜೆಪಿ ಮತ್ತು ಕಾಂಗ್ರೆಸ್ ಅಸಡ್ಡೆ ತೋರುತ್ತವೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲಿದೆ. ಮಾಜಿ ಸಿಎಂ ನುಡಿದಂತೆ ನಡೆದರೆ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳು ಜೆಡಿಎಸ್ ಬೆಂಬಲಿಸುತ್ತೇವೆ ಎಂಬ ಬಗ್ಗೆ ಚರ್ಚೆಯಾಗಿದೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.


