ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಸಿದ್ದರಾಮ್ಯ ಪ್ರಾರ್ಥಿಸಿದ್ದಾರೆ.
ನನ್ನ ಆತ್ಮೀಯರೂ ಆಗಿದ್ದ ಇವರನ್ನು ನಾನಾ ಸಂದರ್ಭಗಳಲ್ಲಿ ಭೇಟಿಯಾಗುವ ಅವಕಾಶ ಹತ್ತಾರು ಬಾರಿ ಒದಗಿ ಬಂದಿತ್ತು. 90 ವರ್ಷ ವಯಸ್ಸಿನ ಇವರು ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರು. ಕನ್ನಡ ರಂಗಭೂಮಿ ಮೂಲಕ ಸಿನಿಮಾ ರಂಗ ಪ್ರವೇಶಿಸಿ ಬೆಳ್ಳಿ ಪರದೆಯನ್ನು ಶ್ರೀಮಂತಗೊಳಿಸಿದ ಭಗವಾನ್ ಅವರು ತಮ್ಮ 65 ವರ್ಷಗಳ ಸುದೀರ್ಘ ಸಿನಿಮಾ ಸಾಹಸಗಳಲ್ಲಿ 28ಕ್ಕೂ ಹೆಚ್ಚು ಕನ್ನಡ ಕಾದಂಬರಿಗಳನ್ನು ಬೆಳ್ಳಿ ಪರದೆಗೆ ತಂದ ಕೀರ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ.
ಹೆಸರಾಂತ ಚಲನಚಿತ್ರ ನಿರ್ದೇಶಕ ಭಗವಾನ್ ಅವರ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಗವಾನ್ ಅವರ ನಿಧನದಿಂದ ಹಿರಿಯ ಮಾರ್ಗದರ್ಶಕರೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ ಎಂದು ಶೋಕ ಸಂದೇಶದಲ್ಲಿ ಕಂಬನಿ ಮಿಡಿದಿದ್ದಾರೆ.
ಕುಟುಂಬದ ಸದಸ್ಯರೆಲ್ಲರೂ ಕುಳಿತು ನೋಡಬಹುದಾದ ಸಿನಿಮಾಗಳ ಯುಗದಲ್ಲಿ ಭಗವಾನ್ ಅದರ ಅಧ್ವರ್ಯುಗಳಲ್ಲಿ ಒಬ್ಬರಾಗಿದ್ದರು. ರಾಜಕುಮಾರ್ ಅವರನ್ನು ರಸಮಂಜರಿ ಕಾರ್ಯಕ್ರಮಗಳ ಮೂಲಕ ಜನಮಾನಸಕ್ಕೆ ಮತ್ತಷ್ಟು ಹತ್ತಿರವಾಗಿಸಿದ್ದರಲ್ಲಿ ಇವರ ಪಾತ್ರವೂ ಇತ್ತು ಎಂದು ಅವರು ಸ್ಮರಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರು, ಅನೇಕ ಸದಭಿರುಚಿಯ ಚಿತ್ರಗಳನ್ನು ಕೊಟ್ಟವರು, ವರನಟರಾದ ಡಾ.ರಾಜ್ ಕುಮಾರ್ ಅವರು ನಟಿಸಿದ ‘ ಕಸ್ತೂರಿ ನಿವಾಸ ‘ ದಂಥ ಆವಿಸ್ಮರಣೀಯ ಚಿತ್ರವನ್ನು ನಿರ್ದೇಶನ ಮಾಡಿದ್ದ ದೊರೆ ಭಗವಾನ್ ಜೋಡಿ ಖ್ಯಾತಿಯ ಎಸ್.ಕೆ. ಭಗವಾನ್ ಅವರು ನಿಧನರಾದರೆಂಬ ಸುದ್ದಿ ಕೇಳಿ ಬಹಳ ದುಃಖವಾಯಿತು.
ಭಗವಾನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.


