ಶಾಸಕ ನರೇಂದ್ರ ರಾಜುಗೌಡ ಅವರು ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ನಮ್ಮ ಕೆಲಸದ ಬಗ್ಗೆ ಕಿವಿಯಲ್ಲಿ ಕೇಳಿದರೆ ನಂಬಲು ಸಾಧ್ಯವಿಲ್ಲ. ಕಣ್ಣಾರೇ ನೋಡಿದರೆ ಮಾತ್ರ ನಂಬಲು ಸಾಧ್ಯ. ಇಡೀ ರಾಜ್ಯದಲ್ಲಿ ಹನೂರು ಕ್ಷೇತ್ರದ ಒಂದೇ ವಿದ್ಯಾರ್ಥಿ ನಿಲಯದಲ್ಲಿ ಮೂರೂವರೇ ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ದಾಖಲೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚಾಮರಾಜನಗರದ ಹನೂರಿನಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ನನ್ನ ತಂದೆ ತಾಯಿ ನನಗೆ ವಿದ್ಯಾಭ್ಯಾಸ ಕೊಡಿಸಲು ಬೆಂಗಳೂರಿಗೆ ಕಳುಹಿಸಿದರು. ರಾಜ್ಯದ ಎಲ್ಲೆಡೆ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಲು ವಿದ್ಯಾರ್ಥಿಗಳನ್ನು ಬೇರೆ ಊರುಗಳಿಗೆ ಕಳುಹಿಸುತ್ತಿದ್ದಾರೆ. ಆದರೆ ನರೇಂದ್ರ ಅವರು ಇಲ್ಲೇ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಮಾಡಿದ್ದಾರೆ ಎಂದರು.
ಇಲ್ಲಿ 151 ಸಮುದಾಯ ಭವನಗಳಿವೆ. ನನ್ನ ಕ್ಷೇತ್ರದಲ್ಲಿ ಇಷ್ಟು ಸಮುದಾಯ ಭವನ ಕಟ್ಟಿಸಲು ಆಗಿಲ್ಲ. ಆದರೆ ನರೇಂದ್ರ ಅವರು ಈ ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ರೈತರಿಗೆ ಕಾಂಗ್ರೆಸ್ ಪಕ್ಷ ಉಚಿತ ವಿದ್ಯುತ್ ನೀಡಿತು. ನಾನು ಇಂಧನ ಸಚಿವನಾಗಿದ್ದಾಗ ವಿದ್ಯುತ್ ಸರಬರಾಜಿನ ನಷ್ಟ ತಪ್ಪಿಸಲು ಈ ಕ್ಷೇತ್ರದಲ್ಲಿ 20 ಮೆ.ವ್ಯಾಟ್ ವಿದ್ಯುತ್ ಉತ್ಪಾದಿಸಲು ಸೋಲಾರ್ ಕೇಂದ್ರ ಸ್ಥಾಪಿಸಲಾಯಿತು ಎಂದು ಹೇಳಿದರು.
ನಾವು ಮಾದೇಶ್ವರನ ಕ್ಷೇತ್ರದಲ್ಲಿ ಮಾತನಾಡುತ್ತಿದ್ದು, ಆತ ವರವನ್ನು ನೀಡುವುದಿಲ್ಲ. ಶಾಪವನ್ನು ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ಅದನ್ನು ಈ ಭಾಗದ ನಾಯಕರು ಸಮರ್ಪಕವಾಗಿ ಬಳಸಿಕೊಂಡು ಕೆಲಸ ಮಾಡಿದ್ದಾರೆ ಎಂದರು.
ಬಿಜೆಪಿ ಸರ್ಕಾರ 600 ಭರವಸೆ ನೀಡಿ ಕೇವಲ 50 ಭರವಸೆ ಈಡೇರಿಸಿದ್ದಾರೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು, ನಿಮ್ಮ ಆದಾಯ ಡಬಲ್ ಆಯಿತಾ? 1 ಲಕ್ಷ ರೂ. ರೈತರ ಸಾಲ ಮನ್ನಾ ಮಾಡುತ್ತೇವೆ ಎಂದರು, ಮಾಡಿದರಾ? ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು, ಹಾಕಿದರಾ? ಇಲ್ಲ. ಅಚ್ಛೇದಿನ ನೀಡುತ್ತೇವೆ ಎಂದರು, ಅಚ್ಛೇದಿನ ಬಂತಾ? ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು, ನಿಮಗೆ ಉದ್ಯೋಗ ಸಿಕ್ಕಿತಾ? ಎಲ್ಲಾ ಇಲಾಖೆಗಳ ನೇಮಕಾತಿಯಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದರು.
ಈ ಸರ್ಕಾರದಲ್ಲಿ 40% ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದಾರೆ. ಮಠಾಧೀಶರು ಈ ಸರ್ಕಾರ 30% ಕಮಿಷನ್ ಪಡೆಯುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಬಂದ ನಂತರ ಈ ಭ್ರಷ್ಟಾಚಾರ ಕೊನೆಗಾಣಿಸುತ್ತೇವೆ ಎಂದು ಭರವಸೆ ನೀಡಿದರು.


