ದೆಹಲಿಯಲ್ಲಿ ಓಲಾ, ಊಬರ್, ರ್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆಗೆ ನಿಷೇಧ ಹೇರುವ ಮೂಲಕ ಆಮ್ ಆದ್ಮಿ ಪಾರ್ಟಿ ಆಟೋ ಚಾಲಕರ ಹಿತರಕ್ಷಣೆಗೆ ಮುಂದಾಗಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ.
ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕದ ಆಟೋ ಚಾಲಕರು ಹಲವು ಪ್ರತಿಭಟನೆ ಮಾಡಿದ್ದಾರೆ. ಆದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಶ್ರೀರಾಮುಲು ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಮುಂದಾಗಿಲ್ಲ ಎಂದು ದೂರಿದರು.
ಇವರಿಗೆ ಓಲಾ, ಊಬರ್, ರ್ಯಾಪಿಡೋ ಮುಂತಾದ ಕಂಪನಿಗಳು ಕೊಡುವ ಕಮಿಷನ್ ಮುಖ್ಯವೇ ಹೊರತು, ಆಟೋ ಚಾಲಕರಂತಹ ಜನಸಾಮಾನ್ಯರ ಕಷ್ಟಗಳು ಅರ್ಥವಾಗುವುದಿಲ್ಲ ಎಂದು ಟೀಕಿಸಿದರು.
ಕರ್ನಾಟದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಮ್ ಆದ್ಮಿ ಪಾರ್ಟಿ ಬದ್ಧವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಸಿಕ್ಕರೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಭ್ರಷ್ಟ ಬಿಜೆಪಿಯ 40ರಷ್ಟು ಕಮಿಷನ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆದು ಜನಸಾಮಾನ್ಯರ ಪರವಾದ ಆಡಳಿತ ನೀಡುವ ಆಮ್ ಆದ್ಮಿ ಪಾರ್ಟಿಯನ್ನು ಅಧಿಕಾರಕ್ಕೆ ತರಲು ಆಟೋ ಚಾಲಕರು ಒಗ್ಗೂಡಬೇಕು ಎಂದು ಮನವಿ ಮಾಡಿದ್ದಾರೆ.


