ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ 10 ಕೆ.ಜಿ. ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಇದು ನಮ್ಮ ಪಕ್ಷದ ಮೂರನೇ ಗ್ಯಾರೆಂಟಿ ಯೋಜನೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೋವಿಡ್ ಕಾಲದಲ್ಲಿ ನಮ್ಮ ಉಚಿತ ಅಕ್ಕಿ ಹಾಗೂ ನರೇಗಾ ಕಾರ್ಯಕ್ರಮಗಳು ಜನರ ಬದುಕಿಗೆ ಆಸರೆಯಾಗಿತ್ತು. ಆದರೆ ಈ ಸರ್ಕಾರದ ತೀರ್ಮಾನ ಜನರಿಗೆ ನೋವು ತಂದಿದೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರದ ಸುಳ್ಳಿನಿಂದ ಬೇಸತ್ತಿರುವ ಜನ ಯಾರನ್ನು ನಂಬಬೇಕು ಎಂದು ತೋಚುತ್ತಿಲ್ಲ. ಹೀಗಾಗಿ ನಮ್ಮ ಯೋಜನೆಯನ್ನು ನಾವು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಲು ಗ್ಯಾರಂಟಿ ಕಾರ್ಡ್ ಅನ್ನು ಪ್ರತಿ ಮನೆಗೂ ನೀಡುತ್ತಿದ್ದೇವೆ ಎಂದು ಹೇಳಿದರು.
ಈಗ ಅಕ್ಕಿ ನೀಡಲು 4-5 ಸಾವಿರ ಕೋಟಿ ಖರ್ಚಾಗುತ್ತಿದ್ದು, ಈಗ 10 ಕೆ.ಜಿ ಹೆಚ್ಚಾಗುವುದರಿಂದ ಹೆಚ್ಚುವರಿಯಾಗಿ 3-4 ಸಾವಿರ ಕೋಟಿ ಹೆಚ್ಚು ವೆಚ್ಚ ತಗುಲಬಹುದು. ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು, ಹಸಿವಿನಿಂದ ಮಲಗಬಾರದು ಎಂಬುದು ನಮ್ಮ ಉದ್ದೇಶ ಎಂದು ವಿವರಿಸಿದರು.
ಬೊಮ್ಮಾಯಿ ಅವರು ಇದು ಸಿದ್ದರಾಮಯ್ಯ ಅವರ ಕಾರ್ಯಕ್ರಮ ಅಲ್ಲ. ಮೋದಿ ಕಾರ್ಯಕ್ರಮ ಎನ್ನುತ್ತಿದ್ದಾರೆ. ಇದು ಮೋದಿ ಅವರ ಕಾರ್ಯಕ್ರಮವಾದರೆ ಗುಜರಾತ್, ಉತ್ತರ ಪ್ರದೇಶದಲ್ಲಿ ಉಚಿತ ಅಕ್ಕಿ ನೀಡುತ್ತಿಲ್ಲ ಯಾಕೆ? ಇನ್ನು ದೇಶದಲ್ಲಿ ಆಹಾರ ಭದ್ರತಾ ಕಾಯ್ದೆ ಮೋದಿ ಅವರು ಜಾರಿಗೆ ತಂದರಾ? ಇವರು ಸುಳ್ಳನ್ನು ಹೇಳುವುದನ್ನು ಅಭ್ಯಾಸ ಮಾಡಿಕೊಂಡಿದ್ದು, ಇದಕ್ಕಾಗಿಯೇ ಆರ್ ಎಸ್ ಎಸ್ ನವರು ಇವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದರು.
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ ಉಳಿತಾಯ ಮಾಡಲು ಸಹಕಾರಿಯಾಗುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನವನ್ನು ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದು ಹೇಳಿದರು.
ನಮ್ಮ ಸರಕಾರ ನೀಡುತಿದ್ದ 7 ಕೆ.ಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆ.ಜಿಗೆ ಇಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಾನು, ನಮ್ಮ ಶಾಸಕಾಂಗ ಪಕ್ಷದ ನಾಯಕರು, ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಇತರ ನಾಯಕರೆಲ್ಲರೂ ಸೇರಿ ಚರ್ಚಿಸಿ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಶಕ್ತಿ ತುಂಬಬೇಕು, ಆ ಮೂಲಕ ರಾಜ್ಯವನ್ನು ಹಸಿವು ಮುಕ್ತವನ್ನಾಗಿ ಮಾಡಬೇಕು ಎಂದು ನಮ್ಮ ಮೂರನೇ ಗ್ಯಾರಂಟಿ ಯೋಜನೆಯಾಗಿ 10 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದರು.


