ತುಮಕೂರು ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾದ ಕೊಬ್ಬರಿ ಬೆಲೆ ಕುಸಿದಿದ್ದು, ಸರ್ಕಾರದ ಒಬ್ಬ ಸಚಿವರಾಗಲಿ, ಶಾಸಕರಾಗಲಿ ಮತ್ತು ಪ್ರತಿಪಕ್ಷದ ಮುಖಂಡರಾಗಲೀ ಮಾತನಾಡುತ್ತಿಲ್ಲ. ರೈತರ ಹಿತ ಕಾಯುವಲ್ಲಿ ಆಡಳಿತ ಪಕ್ಷ ಮತ್ತು ವಿರೋಧಪಕ್ಷಗಳು ವಿಫಲವಾಗಿವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆಗಿಂತಲೂ ಮುಕ್ತ ಮಾರುಕಟ್ಟೆಯ ಬೆಲೆ ಕುಸಿದಿದೆ. ರೈತರು ವಿಧಿಯಿಲ್ಲದೆ ಕೊಬ್ಬರಿ ಮಾರಾಟ ಮಾಡಿ, ಯಾವುದೇ ಲಾಭವಿಲ್ಲದೆ ಬರಿಗೈಯಲ್ಲಿ ಮರಳುತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಒಂದು ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಪಕ್ಷ 25 ಸಾವಿರ ರೂ ಬೆಂಬಲ ಬೆಲೆ ನಿಗದಿ ಪಡಿಸಬೇಕೆಂದು ಆಗ್ರಹಿಸಿದರು.
ಆಡಳಿತ ಪಕ್ಷದ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಶಾಸಕರು ಮತ್ತು ಪ್ರತಿಪಕ್ಷಗಳ ಮುಖಂಡರು ಮುಂದಿನ ಚುನಾವಣೆಯನ್ನು ಹೇಗೆ ಗೆಲ್ಲಬೇಕೆಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆಯೇ ವಿನಃ ಕೊಬ್ಬರಿ ಬೆಲೆ ಕುಸಿದಿರುವ ಬಗ್ಗೆ ಎಳ್ಳಷ್ಟು ಕಾಳಜಿ ವಹಿಸುತ್ತಿಲ್ಲ ಎಂದು ದೂರಿದರು.
ಮಾರುಕಟ್ಟೆಯಲ್ಲಿ ಇಷ್ಟು ಕೆಳಮಟ್ಟಕ್ಕೆ ಬೆಲೆ ಕುಸಿಯಲು ಮಲೇಷಿಯಾ, ಇಂಡೋನೇಷಿಯಾ, ಶ್ರೀಲಂಕಾದಿಂದ ತೆಂಗು ಮತ್ತು ಅದರ ಉತ್ಪನ್ನಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ದೇಶಕ್ಕೆ ಅಮದಾಗಿರುತ್ತಿರುವುದೇ ಕಾರಣ. ಆದರೆ ಈ ಬಗ್ಗೆ ಕೇಂದ್ರದ ಯಾವೊಬ್ಬ ಸಚಿವರು ಮಾತನಾಡುತಿಲ್ಲ ಎಂದು ಟೀಕಿಸಿದರು.
ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ತೆರೆದಿರುವ ಖರೀದಿ ಕೇಂದ್ರಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಹಲವು ನಿಯಮಗಳಿಂದ ರೈತರು ರಾಗಿ ಮಾರಾಟ ಮಾಡುವುದೇ ಕಷ್ಟವಾಗಿದೆ. ಹಾಗಾಗಿ ಸರ್ಕಾರ ನಿಯಮಗಳನ್ನು ಸಡಿಲಗೊಳಿಸಿ, ರೈತ ಸ್ನೇಹಿ ಕೇಂದ್ರಗಳನ್ನು ತೆರೆಯುವಂತೆ ಅವರು ಒತ್ತಾಯಿಸಿದರು.
ರೈತರಿಗೆ ಮಾರಕವಾಗಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಅಮೂಲ್ ಜೊತೆಗೆ ನಂದಿನಿ ವಿಲೀನಗೊಳಿಸುವ ಪ್ರಕ್ರಿಯೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಮಾಧ್ಯಮಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್, ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ, ಜಿಲ್ಲಾಧ್ಯಕ್ಷ ಆನಂದಪಟೇಲ್, ಗೌರವಾಧ್ಯಕ್ಷ ಧನಂಜಯ್ ಆರಾಧ್ಯ, ಪ್ರಧಾನ ಕಾರ್ಯದರ್ಶಿ ಲೋಕೇಶ್, ವಿವಿಧ ತಾಲೂಕುಗಳ ಅಧ್ಯಕ್ಷ ಅನಿಲ್, ಸಿದ್ದರಾಜು, ರುದ್ರೇಗೌಡ, ಕೀರ್ತಿ ಹಳೆಸಂಪಿಗೆ, ಲಕ್ಷ್ಮಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.


