ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವ ವಯಸ್ಸಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಇದು ತಮ್ಮ ಕೊನೆಯ ಚುನಾವಣೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರದ್ದು ನಿವೃತ್ತಿಯಾಗುವ ವಯಸ್ಸಲ್ಲ. ಬಹಳ ಸೇವೆಯನ್ನು ಮಾಡಬೇಕು ಎಂದಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಎಲ್ಲಾ ರೀತಿಯದ್ದು ನಡೆಯುತ್ತದೆ. ಪ್ರತಿ ಚುನಾವಣೆಗೂ ಜನರ ಪ್ರಬುದ್ಧತೆ ಹೆಚ್ಚಾಗಿದೆ. ನಾವು ಮಾತನಾಡುವಾಗ ಅದರ ಹಿಂದಿನ ಚಿಂತನೆ, ಕಲ್ಪನೆ ಜನರಿಗೆ ತಿಳಿಯುತ್ತದೆ ಎಂದು ತಿಳಿಸಿದ್ದಾರೆ.
ಮಾರ್ಚ್ 1ರಿಂದ 4ರವರೆಗೆ ರಥಯಾತ್ರೆ ಪ್ರಾರಂಭವಾಗಲಿದೆ. ಎಲ್ಲಾ ಮತ ಕ್ಷೇತ್ರಗಳಿಗೆ ಭೇಟಿ ನೀಡಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಈ ರಥಯಾತ್ರೆ ಸಂದರ್ಭದಲ್ಲಿ ಹಲವಾರು ಜನ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಧರ್ಮೇಂದ್ರ ಪ್ರಧಾನ್ ಅವರೂ ರಾಜ್ಯಕ್ಕೆ ಬಂದು ಹೋಗಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಪ್ರಚಾರವಾಗುತ್ತದೆ ಹಾಗೂ ಎಲ್ಲಾ ಪ್ರಮುಖ ನಾಯಕರೂ ಬರುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.(ಸುದ್ದಿ ಟಿವಿ ಫೇಸ್ಬುಕ್ ವಾಲ್ ನಿಂದ ತೆಗೆದುಕೊಂಡಿರುವುದು)


