ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ನಡೆಸುತ್ತಿದ್ದ ಮುಷ್ಕರ ವಾಪಸ್ ಪಡೆದಿದ್ದಾರೆ.
ವೇತನ ಹೆಚ್ಚಳವು ನಿವೃತ್ತಿ ಮತ್ತು ತುಟ್ಟಿಭತ್ಯೆಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮತ್ತು ಮಧ್ಯಂತರ ಪರಿಹಾರದ ಕುರಿತ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ರಚಿಸಲು ಸರ್ಕಾರ ಆದೇಶದಲ್ಲಿ ತಿಳಿಸಿರುವುದರಿಂದ ಮುಷ್ಕರವನ್ನು ಅಂತ್ಯಗೊಳಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದ್ದಾರೆ.
ಏಳನೇ ವೇತನ ಆಯೋಗದ ವರದಿ ಜಾರಿ ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರು. ಹೀಗಾಗಿ ಸರ್ಕಾರ ನೌಕರರ ಒತ್ತಡಕ್ಕೆ ಮಣಿದು ಬೇಡಿಕೆ ಈಡೇರಿಸುವ ಭರವಸೆ ನೀಡಿದೆ. ಆದ್ದರಿಂದ ಮುಷ್ಕರದ ಅರ್ಧದಲ್ಲೇ ನೌಕರರು ಕಚೇರಿಗೆ ತೆರಳುವಂತಾಯಿತು.

ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಏಪ್ರಿಲ್ 1, 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ತಿಳಿಸಿದೆ.


