ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡು, ತಕ್ಷಣ ಅದರ ಶಿಫಾರಸುಗಳನ್ನು ಜಾರಿಗೆ ಕೊಡುವ ಕೆಲಸ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಜೆಪಿ ಸರ್ಕಾರದಿಂದ ಇದು ಸಾಧ್ಯವಾಗದಿದ್ದರೆ ನಾವು ಅಧಿಕಾರಕ್ಕೆ ಬಂದ ಕೂಡಲೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ಹಿಂದೆ 6ನೇ ವೇತನ ಆಯೋಗ ರಚನೆ ಮಾಡಿ, ರಾಜ್ಯದ ಬೊಕ್ಕಸದಿಂದ ರೂ.10,600 ಕೋಟಿ ಹೆಚ್ಚುವರಿಯಾಗಿ ನೀಡಿ ಜಾರಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಬಿಜೆಪಿಯವರಂತೆ ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ನಾವು ಮಾಡಿದವರಲ್ಲ ಎಂದು ತಿಳಿಸಿದ್ದಾರೆ.
ಚುನಾವಣೆಗೆ ಮುಂಚಿತವಾಗಿ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ಕೊಟ್ಟು ನಮ್ಮ ಬದ್ಧತೆ ತೋರಿಸಿದ್ದೆವು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ನೌಕರರ ಬಗ್ಗೆ ಕಾಳಜಿ, ಆಡಿದ ಮಾತಿನಂತೆ ನಡೆದುಕೊಳ್ಳುವ ಇಚ್ಛಾಶಕ್ತಿ ಎರಡೂ ಇಲ್ಲ ಎಂದು ಟೀಕಾಪ್ರಹಾರ ಮಾಡಿದ್ದಾರೆ.


