ಮಹಾಭಾರತದಲ್ಲಿ ಬಕಾಸುರನಿಗೆ ಎಷ್ಟು ಕೊಟ್ಟರೂ ತಿನ್ನುತ್ತಿದ್ದನಂತೆ. ಅದೇ ರೀತಿ ಈ 40ರಷ್ಟು ಕಮಿಷನ್ ಸರ್ಕಾರ ಕನ್ನಡಿಗರ ಪಾಲಿಗೆ ಭ್ರಷ್ಟಾಚಾರದ ಬಕಾಸುರನಾಗಿದ್ದು, ಜನರ ಹಣ ಹಾಗೂ ಜೀವನವನ್ನೇ ನುಂಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾರ್ಮಿಕ ಇಲಾಖೆಯ ಟೆಂಡರ್ ದಾಖಲೆಯಲ್ಲಿ, ‘ಯಾರು ಈ ಟೆಂಡರ್ ಪಡೆಯುತ್ತಾರೋ ಅವರೇ ಮೂರನೇ ವ್ಯಕ್ತಿ ನೇಮಿಸಿ ಸಮೀಕ್ಷೆ ಹಾಗೂ ಗುಣಮಟ್ಟದ ಪರೀಕ್ಷೆ ಮಾಡಿಸಿ ಆ ಬಗ್ಗೆ ಸರ್ಕಾರಕ್ಕೆ ಪತ್ರ ನೀಡಬೇಕು’ ಎಂದು ತಿಳಿಸಲಾಗಿದೆ. ಶಾಲಾ ಕಿಟ್ ಗಳನ್ನು ಕಾರ್ಮಿಕರ ಮಕ್ಕಳ ಪೈಕಿ 5ನೇ ತರಗತಿಯವರಿಗೆ ಮೊದಲು ನೀಡಿ, ನಂತರ ಉಳಿದರೆ 4,3,2,1ರಂತೆ ತರಗತಿ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಹೇಳಿದೆ. ಹಾಗಿದ್ದರೆ ಇದನ್ನು ಕೇವಲ 5ನೇ ತರಗತಿಗೆ ಎಂದು ಟೆಂಡರ್ ಕರೆಯಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಸರ್ಕಾರದ ಬಳಿ ಯಾವ ತರಗತಿಯಲ್ಲಿ ಎಷ್ಟು ಜನ ನೊಂದಾಯಿತ ಕಾರ್ಮಿಕ ಮಕ್ಕಳಿದ್ದಾರೆ ಎಂಬ ಅಂಕಿ ಅಂಶಗಳು ಇಲ್ಲ. ಸಮೀಕ್ಷೆ ನಡೆಸದೇ, ಅಂಕಿ ಅಂಶಗಳು ಇಲ್ಲದೇ ಈ ಟೆಂಡರ್ ಕರೆದಿದ್ದಾರೆ. ಇದು ಆಡಳಿತ ನಡೆಸುವ ರೀತಿಯೇ? ಇದು ಕಾರ್ಮಿಕರ ಅಭಿವೃದ್ಧಿಗೆ ತೆಗೆದುಕೊಂಡಿರುವ ತೀರ್ಮಾನವೇ? ಸಾಮಾನ್ಯವಾಗಿ ಸಮೀಕ್ಷೆ ಮಾಡಿ ನಂತರ ಎಷ್ಟು ಮಕ್ಕಳಿದ್ದಾರೆ ಎಂದು ಅಂಕಿ ಅಂಶ ಪಡೆದು ಆ ನಂತರ ಟೆಂಡರ್ ಕರೆಯಬೇಕು. ಆದರೆ ಇಲ್ಲಿ ಯಾವುದೇ ಮಾಹಿತಿ ಇಲ್ಲದೇ ಈ ಟೆಂಡರ್ ಕರೆದಿದ್ದಾರೆ. ಈ ಇಲಾಖೆ ಕಾರ್ಮಿಕರ ಏಳಿಗೆಗಾಗಿ ಏನು ಮಾಡುತ್ತಿದ್ದಾರೆ? ಎಂದು ಕೇಳಿದ್ದಾರೆ.
ಬಿಜೆಪಿ ಭರವಸೆ ಎಂದು ಪೋಸ್ಟರ್ ಹಾಕುತ್ತಾರೆ. ಕಾರ್ಮಿಕರಿಗೆ 10 ಭರವಸೆ ನೀಡಿದ್ದು ಒಂದಾದರೂ ಭರವಸೆ ಈಡೇರಿಸಿದ್ದೀರಾ? ಈ ಸರ್ಕಾರ ದುಡಿಯುವ ಕೈಯಿಂದ ಕಿತ್ತು ತಿನ್ನುತ್ತಿದ್ದಾರೆ. ಕಾರ್ಮಿಕರು, ಮೇಷನ್, ಎಲೆಕ್ಟ್ರಿಷಿಯನ್ ಕಿಟ್ ಗಳಲ್ಲಿ ಹಗರಣ ಮಾಡುತ್ತಿದ್ದಾರೆ ಎಂದು ದೂರಿದರು.
ಅವರಿಗೆ ಧಮ್ಮು ತಾಕತ್ತು ಇದ್ದರೆ ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಮಾಡಿಸಿ. ಅವರು ಎಲ್ಲಿ ಹೇಳುತ್ತಾರೋ ಅಲ್ಲಿ ಹೋಗಿ ನಾವು ಸಾಕ್ಷಿ ನೀಡುತ್ತೇವೆ. ಇವರು ನ್ಯಾಯಾಂಗ ತನಿಖೆ ನೀಡುವುದು ಅನುಮಾನ. ಅದು ನೀಡಲು ಆಗದಿದ್ದರೆ ಈ ಕಿಟ್ ತರಿಸಿ, ಇವುಗಳ ಮೌಲ್ಯ ಎಷ್ಟಿದೆ ಎಂದು ಅವರೇ ಪರಿಶೀಲನೆ ಮಾಡಲಿ. ಇಷ್ಟಾದರೂ ಇಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದರೆ ರಾಜ್ಯವನ್ನು ದೇವರೆ ಕಾಪಾಡಬೇಕು. ಇವರು ಭ್ರಷ್ಟಾಚಾರದ ಬಕಾಸುರರಾಗಿದ್ದಾರೆ. ಎಷ್ಟು ತಿಂದರೂ ಇವರಿಗೆ ತೃಪ್ತಿಯಾಗುತ್ತಿಲ್ಲ. ನಾವು ಕಾರ್ಮಿಕರ ಪರವಾಗಿ ನಿಲ್ಲುತ್ತೇವೆ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ತನಿಖೆ ಮಾಡಿಸುತ್ತೇವೆ ಎಂದರು.
ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಮಾತನಾಡಿ, ಇಂದು ಕಾರ್ಮಿಕ ಇಲಾಖೆಯಲ್ಲಿ ಆಗಿರುವ 250 ಕೋಟಿ ಮೌಲ್ಯದ ಕಿಟ್ ಗಳ ಹಗರಣದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಕಾರ್ಮಿಕರ ಇಲಾಖೆಯಲ್ಲಿ 7-8 ಸಾವಿರ ಕೋಟಿ ಅವ್ಯವಹಾರ ನಡೆದಿದ್ದು, ಅದರ ಮೊದಲ ಭಾಗ ಈ ಹಗರಣವಾಗಿದೆ. ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ದಾಖಲೆ ಕೇಳುತ್ತಾರೆ. ನಾವು ಇಂದು ದಾಖಲೆ ಸಮೇತ ಎಲ್ಲಾ ವಿಚಾರ ನಿಮ್ಮ ಮುಂದಿಡುತ್ತೇವೆ ಎಂದು ಹೇಳಿದರು.
ಕಾರ್ಮಿಕ ಇಲಾಖೆಯಿಂದ ಯಾವ ಕಿಟ್ ನೀಡಲಾಗುತ್ತಿದೆ. ಅವುಗಳ ಮೌಲ್ಯ ಏನು? ಇಲಾಖೆ ವತಿಯಿಂದ ಈ ಕಿಟ್ ಗಳಿಗೆ ಎಷ್ಟು ದರ ನಿಗದಿ ಮಾಡಿದ್ದಾರೆ ಎಂಬ ಸಂಪೂರ್ಣ ದಾಖಲೆ ನಿಮ್ಮ ಮುಂದೆ ಇಡಲಾಗುತ್ತಿದೆ ಎಂದರು.
1996ರಲ್ಲಿ ಕರ್ನಾಟಕ ಕಟ್ಟಡ ಹಾಗೂ ಇತರ ಕಾರ್ಮಿಕರ ಕಾಯ್ದೆ ಜಾರಿ ಮಾಡಿದ್ದು, ಶೇ.1ರಷ್ಟು ಸುಂಕ ಸಂಗ್ರಹಿಸಲು ಆರಂಭಿಸಲಾಯಿತು. 2006ರಲ್ಲಿ ಇದಕ್ಕೆ ನಿಯಮಾವಳಿ ರೂಪಿಸಿ ಸುಂಕದ ರೂಪದಲ್ಲಿ ಸಂಗ್ರಹಿಸಿರುವ ಹಣವನ್ನು ಕಾರ್ಮಿಕರ ಕಲ್ಯಾಣಕ್ಕೆ ಹೇಗೆ ವಿನಿಯೋಗಿಸಬೇಕು ಎಂದು ಸರ್ಕಾರ ನಿಯಮಾವಳಿ ರೂಪಿಸಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸೆಸ್ ಅನ್ನು ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ಮಾತ್ರ ವಿನಿಯೋಗಿಸಬೇಕು. ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಸುಮಾರು 2500 ಕೋಟಿ ವಾರ್ಷಿಕವಾಗಿ ಸೆಸ್ ಸಂಗ್ರಹವಾಗುತ್ತದೆ. ಇನ್ನು ಈ ಇಲಾಖೆ ಇಟ್ಟಿರುವ ಠೇವಣಿಗೆ ಬಡ್ಡಿಯೇ ವಾರ್ಷಿಕ 350 ಕೋಟಿ ಸಿಗುತ್ತಿದೆ ಎಂದು ತಿಳಿಸಿದರು.


