ಸಾಂವಿಧಾನಿಕ ಕರ್ತವ್ಯ ಮತ್ತು ಕಾನೂನು-ಕಟ್ಟಳೆಗಳನ್ನು ಮೀರಿ ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ಯಂತ್ರದ ದುರುಪಯೋಗ ಮತ್ತು ಗುತ್ತಿಗೆದಾರರಿಂದ ನಡೆಯುತ್ತಿರುವ ಹಣದ ಸುಲಿಗೆಯನ್ನು ತಡೆಯಲು ತಕ್ಷಣ ವಿಧಾನಸಭೆಯ ಚುನಾವಣಾ ದಿನಾಂಕವನ್ನು ಘೋಷಿಸಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೆ ತರಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.
ಶೀಘ್ರದಲ್ಲಿ ಪಕ್ಷದ ಹಿರಿಯ ನಾಯಕರ ಜೊತೆಯಲ್ಲಿ ಚರ್ಚಿಸಿ ರಾಜ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿಪತ್ರ ಸಲ್ಲಿಸುತ್ತೇವೆ ಎಂದರು.
ಒಂದೆಡೆ ಚುನಾವಣಾ ಪ್ರಚಾರಕ್ಕಾಗಿ ಜನರ ತೆರಿಗೆ ಹಣ ಮತ್ತು ಸರ್ಕಾರಿ ಯಂತ್ರದ ದುರುಪಯೋಗ ನಡೆಯುತ್ತಿದೆ. ಕೋಟ್ಯಂತರ ರೂಪಾಯಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸಾಧನೆ ಮತ್ತು ಪೊಳ್ಳು ಭರವಸೆಗಳ ಪುಟಗಟ್ಟಳೆ ಜಾಹೀರಾತು ನೀಡಲಾಗುತ್ತಿದೆ. ಇನ್ನೊಂದೆಡೆ ಗುತ್ತಿಗೆದಾರರಿಂದ ಭಾರೀ ಪ್ರಮಾಣದಲ್ಲಿ ಕಮಿಷನ್ ಲೂಟಿ ನಡೆಸುತ್ತಿದೆ ಎಂದು ಆರೋಪಿಸಿದರು.
ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿ ಇನ್ನೊಂದು ಆಪರೇಷನ್ ಕಮಲಕ್ಕೆ ರೆಡಿಯಾಗುತ್ತಿದೆ. ಇದಕ್ಕಾಗಿ ಬಿಜೆಪಿಯ ಪ್ರತಿಯೊಬ್ಬ ನಾಯಕರು ಸುಲಿಗೆಗೆ ಇಳಿದಿದ್ದಾರೆ. ಪ್ರತಿಯೊಬ್ಬ ಸಚಿವರಿಗೂ ಟಾರ್ಗೆಟ್ ಕೊಡಲಾಗಿದೆಯಂತೆ. ಲಂಚದ ಪರ್ಸೆಟೇಜ್ 40 ದಾಟಿ 50-60ಕ್ಕೆ ಹೋಗಿದೆ. ಪ್ರತಿಯೊಬ್ಬ ಸಚಿವರ ಕಚೇರಿಯೂ ಸುಲಿಗೆಯ ಕೇಂದ್ರಗಳಾಗುತ್ತಿದೆ. ಇದಕ್ಕಾಗಿ ಅಧಿಕಾರಿಗಳನ್ನು ಕೂಡಾ ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.
ಇದಕ್ಕೆ ದಾವಣಗೆರೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಮಗ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರ ಕೈಗೆ ಸಿಕ್ಕಿ ಹಾಕಿಕೊಂಡಿರುವುದೇ ಸಾಕ್ಷಿ. ಗುತ್ತಿಗೆದಾರರ ಸುಲಿಗೆ ಇದೇ ರೀತಿ ಮುಂದುವರಿದರೆ ಇನ್ನೂ ಕೆಲವು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರೆ ಆಶ್ಚರ್ಯ ಇಲ್ಲ ಎಂದರು.
ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಧೂಳೀಪಟವಾಗುವುದು ಖಂಡಿತ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಕಳೆದ ಆರು ತಿಂಗಳಿನಲ್ಲಿ ಯಾವೆಲ್ಲ ಟೆಂಡರ್ ನೀಡಿದ್ದಾರೆ ಅವುಗಳನ್ನು ಪುನರ್ ಪರಿಶೀಲನೆಗೊಳಪಡಿಸಲಾಗುವುದು. ಲಂಚ ನೀಡಿ ಟೆಂಡರ್ ಪಡೆದಿದ್ದರೆ ಅವುಗಳನ್ನು ರದ್ದುಪಡಿಸಲಾಗುವುದು ಆದ್ದರಿಂದ ಕಮಿಷನ್ ಆಧಾರದಲ್ಲಿ ಗುತ್ತಿಗೆ ಪಡೆಯುತ್ತಿರುವ ಗುತ್ತಿಗೆದಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಎಂದು ಕಿವಿಮಾತು ಹೇಳಿದರು.
ರಾಜ್ಯಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡಿದರೆ ಪುರಾವೆ ಎಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮನ್ನು ಮರುಪ್ರಶ್ನೆ ಮಾಡುತ್ತಾರೆ. ಬಿಜೆಪಿ ಸಚಿವ-ಶಾಸಕರ ಲಂಚಾವತಾರಕ್ಕೆ ಬೇಸತ್ತು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿಗೆ ಪತ್ರ ಬರೆದಿದ್ದಾರೆ, ಲಂಚ ನೀಡಿ ಎಲ್ಲವನ್ನೂ ಕಳೆದುಕೊಂಡಿದ್ದ ಒಬ್ಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ, ಈಗ ಲಂಚ ಪಡೆಯುತ್ತಿದ್ದಾಗಲೇ ದಾವಣಗೆರೆ ಶಾಸಕನ ಮಗ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾನೆ. ಇನ್ನೆಷ್ಟು ಪುರಾವೆ ಬೇಕು ಮುಖ್ಯಮಂತ್ರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು ಶಾಸಕರು ಸೇರಿದಂತೆ ಬಿಜೆಪಿಯ ಯಾವ ನಾಯಕನಿಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಉಳಿದಿಲ್ಲ. ಧರ್ಮದ ಹೆಸರಲ್ಲಿ ಹಿಂದು-ಮುಸ್ಲಿಮರನ್ನು ಪರಸ್ಪರ ಕಾದಾಟಕ್ಕೆ ಇಳಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರ ಕೂಡಾ ಜನರಿಗೆ ಅರ್ಥವಾಗಿದೆ. ಈಗ ಉಳಿದಿರುವ ಏಕೈಕ ದಾರಿ ದುಡ್ಡಿನ ರಾಜಕಾರಣ ಎಂದು ತಿಳಿಸಿದರು.


