Friday, January 30, 2026
Google search engine
Homeಮುಖಪುಟರಾಜ್ಯಕ್ಕೆ ಮತ್ತೆ ಬಂದ ಅಮಿತ್ ಶಾಗೆ ಹಾರ್ದಿಕ ಸ್ವಾಗತ.. ಸುಸ್ವಾಗತ - ಮಾಜಿ ಸಿಎಂ ಕುಮಾರಸ್ವಾಮಿ...

ರಾಜ್ಯಕ್ಕೆ ಮತ್ತೆ ಬಂದ ಅಮಿತ್ ಶಾಗೆ ಹಾರ್ದಿಕ ಸ್ವಾಗತ.. ಸುಸ್ವಾಗತ – ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ

ನಿಮ್ಮ ಡಬಲ್ ಎಂಜಿನ್ ಬಿಜೆಪಿ ಕರ್ನಾಟಕ ಸರ್ಕಾರ ಭರ್ತಿ 40ರಷ್ಟು ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದು ಅಮಿತ್ ಶಾ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್‌ ಶಾ ಅವರೇ!! ಎಂದು ವ್ಯಂಗ್ಯವಾಡಿದ್ದಾರೆ.

ಅಮಿತ್ ಶಾ ಅವರೇ ಈಗ ಹೇಳಿ..

ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40ರಷ್ಟು ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮೀಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಪಕ್ಷದ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ? ಎಂದು ಕೇಳಿದ್ದಾರೆ.

ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮೀಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ? ಎಂದು ಪ್ರಶ್ನಗಳ ಸುರಿಮಳೆ ಕರೆದಿದ್ದಾರೆ.

ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ; ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮೀಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ 20%, ಬಿಜೆಪಿ 40%.

ಕರ್ನಾಟಕವನ್ನು ‘ಕಮೀಷನ್‌ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮೀಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮೀಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ ಎಂದು ಹೇಳಿದರು.

ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ ಎಂದರು.

ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular