ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸುತ್ತಿದ್ದು, ಸುಮಾರು 170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು ಚರ್ಚೆಯಾಗಿರುವ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಕಳುಹಿಸಿಕೊಟ್ಟಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇನ್ನು ಕೆಲವು ಕ್ಷೇತ್ರಗಳಲ್ಲಿ ನಾಯಕರುಗಳನ್ನು ಕರೆಸಿ ಚರ್ಚೆ ಮಾಡಬೇಕಿದೆ. ನಾಳೆಯಿಂದ ಎಲ್ಲೆಲ್ಲಿ ಭಿನ್ನಾಭಿಪ್ರಾಯಗಳಿವೆಯೋ ಆ ಕ್ಷೇತ್ರದ ನಾಯಕರನ್ನು ಕರೆಸಿ ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ.
ರಾಜಾಜಿನಗರ ಹಾಗೂ ಚಿಕ್ಕಪೇಟೆ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡಬೇಕು ಎಂಬ ವಿಷಯ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಯಾವ ತೀರ್ಮಾನ ಮಾಡಲಾಗಿದೆ ಎಂದು ಈಗ ಹೇಳುವುದಿಲ್ಲ. ರಾಜ್ಯದಲ್ಲಿ ಪಕ್ಷ ಗೆಲ್ಲುವುದು ಮುಖ್ಯವೇ ಹೊರತು ವ್ಯಕ್ತಿಗಳಲ್ಲ. ಸಾಮಾಜಿಕ ನ್ಯಾಯ ಹಾಗೂ ಪಕ್ಷದ ಗೆಲುವು, ಪಕ್ಷದ ಕುರಿತ ಬದ್ಧತೆ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ ಎಂದರು.
ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಕ್ರೆಡಿಟ್ ವಿಚಾರವಾಗಿ ಮಾತನಾಡಿದ ಅವರು ‘ಈ ಹೆದ್ದಾರಿಯಲ್ಲಿ ಸರ್ಕಾರ ಮೊದಲು ಸರ್ವೀಸ್ ರಸ್ತೆ ಮಾಡಿಕೊಡಲಿ, ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆ ಎನ್ನುತ್ತಾರೆ, ಈ ರಸ್ತೆಯಲ್ಲಿ ಸಾಗುವಾಗ ಗಾಡಿಗಳು ತೊಂದರೆ ಅನುಭವಿಸುತ್ತಿವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಯಾರನ್ನು ಕಳುಹಿಸಲು ಇಚ್ಛೇ ಇದೆಯೋ ಅವರನ್ನು ಕಳುಹಿಸಲಿ. ಹೋಗುವವರನ್ನು ಬೇಡ ಎನ್ನಲು ಆಗುವುದಿಲ್ಲ, ಬರುವವರನ್ನು ತಡೆಯಲು ಆಗುವುದಿಲ್ಲ. ಅವರ ಮಾತಿನಲ್ಲೂ ಸತ್ಯವಿದೆ. ಮಿಕ್ಕ ವಿಚಾರ ನಂತರ ಮಾತನಾಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


