ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿಯವರು ಧಾರವಾಡಕ್ಕೆ ಆಗಮಿಸುತ್ತಿದ್ದು, ಐಐಟಿ, ಜಲ್ ಜೀವನ್ ಮಿಷನ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಬಾರಿ ಮೋದಿ ಬಂದಾಗ ರಾಜ್ಯದ ಅತ್ಯಂತ ಅವಶ್ಯವಿರುವ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡಿರುವ ಹಿನ್ನೆಲೆಯಲ್ಲಿ ಹಲವಾರು ಪೂರ್ಣಗೊಂಡಿರುವ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಕಳೆದ ವರ್ಷಗಳಲ್ಲಿ ಅತಿ ಹೆಚ್ಚು ಹಣ ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಬಂದರುಗಳಿಗೆ ಹಾಗೂ ವಿವಿಧ ಸಂಸ್ಥೆಗಳಿಗೆ, ವಿಶೇಷವಾಗಿ ರಾಜ್ಯ ಹಾಗೂ ಅಂತಾರಾಜ್ಯಗಳ ಮೂಲಭೂತ ಸೌಕರ್ಯಗಳಿಗೆ ಪ್ರಧಾನಿ ದೊಡ್ಡ ಪ್ರಮಾಣದ ಕೊಡುಗೆ ನೀಡಿದ್ದಾರೆ ಎಂದರು.
ಹಂತ ಹಂತವಾಗಿ ಐಐಟಿ ಗೆ ಅನುದಾನ ಒದಗಿಸಲಾಗಿದೆ. ಐಐಟಿ ಪ್ರತಿಷ್ಠಿತ ಸಂಸ್ಥೆಯಾಗಿದ್ದು ದೇಶದಲ್ಲಿಯೇ ನಂಬರ್ ಒನ್ ಐಐಟಿ ಮಾಡುವ ಉದ್ದೇಶವಿದೆ. ಧಾರವಾಡ ಸರಸ್ವತಿಯ ನಗರದಲ್ಲಿ ಐಐಟಿ ಸ್ಥಾಪನೆಯಾಗಿರುವುದು ಕಳಶ ಪ್ರಾಯವಾಗಿದೆ ಎಂದು ಹೇಳಿದರು.
ಬೇಲೆಕೇರಿ ಬಂದರು ಅಭಿವೃದ್ಧಿಯನ್ನು ಸಾಗರಮಾಲಾ ಯೋಜನೆಯಡಿ ಕೈಗೆಟ್ಟಿಕೊಳ್ಳಲಾಗುವುದು. ಕೇಂದ್ರ ಸರ್ಕಾರದ ಯೋಜನೆಯಡಿ 12 ಯೋಜನೆಗಳಿಗೆ ಅನುಮೊದನೆ ಪಡೆದು ಅನುಷ್ಠಾನ ಮಾಡಲಾಗುವುದು. ರಾಜ್ಯದ 2 ಯೋಜನೆಗಳನ್ನು ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಲು ಏಕ್ಸ್ಪ್ರೆಷನ್ ಆಫ್ ಇಂಟರೆಸ್ಟ್ ಕರೆಯಲಾಗಿದೆ ಎಂದು ತಿಳಿಸಿದರು.


