ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಆರ್.ಧ್ರುವನಾರಾಯಣ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಧ್ರುವನಾರಾಯಣ್ ಪತ್ನಿ ಹಾಗೂ ಇಬ್ಬರು ಗಂಡುಮಕ್ಕಳು ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.
ಮೈಸೂರಿನಲ್ಲಿದ್ದ ಧ್ರುವನಾರಾಯಣ್ ಅವರಿಗೆ ಶನಿವಾರ ಬೆಳಗ್ಗೆ 6.30ಕ್ಕೆ ಹೃದಯಾಘಾತ ಕಾಣಿಸಿಕೊಂಡಿದೆ. ಆಗ ಕಾರು ಚಾಲಕನಿಗೆ ಕರೆ ಮಾಡಿದ್ದಾರೆ. ಚಾಲಕ 6.40ಕ್ಕೆ ಬಂದು ಕರೆದುಕೊಂಡು ಹೋಗಿದ್ದರು. ಅವರಿಗೆ ರಕ್ತವಾಂತಿ ಆಗಿತ್ತು. ಮೈಸೂರಿನ ಡಿಆರ್.ಎಂ.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಎರಡು ಬಾರಿ ಸ್ಪರ್ಧಿಸಿ ಸಂಸದರಾಗಿದ್ದ ಅವರು ಅತ್ಯುತ್ತಮ ಲೋಕಸಭಾ ಸದಸ್ಯರಾಗಿ ಗುರುತಿಸಿಕೊಂಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ವಿ.ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು.
2004ರಲ್ಲಿ ಸಂತೇಮಾರನಹಳ್ಳಿ ವಿಧಾನಸಭಾ ಕ್ಷೇತ್ರ, 2008ರಲ್ಲಿ ಕೊಳ್ಳೇಗಾಲ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಗೆಲುವು ಸಾಧಿಸಿದ್ದರು. 1999ರಲ್ಲಿ ಸಂತೇಮಾರಹಳ್ಳಿ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ವಿರುದ್ದ ಸೋಲು ಕಂಡಿದ್ದರು.


