ಪಂಚಮಸಾಲಿ ಮತ್ತು ಒಕ್ಕಲಿಗರಿಗೆ ಮೀಸಲಾತಿಯನ್ನು ಹೆಚ್ಚಳ ಮಾಡಿರುವ ನಡುವೆಯೇ ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ವಿಧಾನಸಭಾ ಚುನಾವಣೆಗೂ ಮೊದಲು ಮೀಸಲಾತಿಯನ್ನು ಪ್ರಕಟಿಸಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ. ಎಸ್.ಸಿ ಮೀಸಲಾತಿಯನ್ನು ನಾಲ್ಕು ವರ್ಗಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ನೀಡಲಾಗಿದೆ ಎಂದು ಹೇಳಿದರು.
ಒಳ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಯ ಎಡಗೈ ಸಮುದಾಯಕ್ಕೆ ಶೇ,6ರಷ್ಟು, ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಶೇಕಡ 5.5ರಷ್ಟು, ಎಸ್ ಸಿ ಸ್ಪರ್ಶ ಜಾತಿಗೆ ಸೇರಿದ ಭೋವಿ, ಕೊರಚ ಬಂಜಾರ ಜಾತಿಗಳಿಗೆ ಶೇ. 4.5ರಷ್ಟು ಮತ್ತು ಇತರೆಯವರಿಗೆ ಶೇ.1ರಷ್ಟು ನೀಡಿ ವರ್ಗೀಕರಿಸಲಾಗಿದೆ.
ಪ್ರವರ್ಗ 2ಎ ಅಡಿ ಮುಸ್ಲೀಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಅವರನ್ನು ಆರ್ಥಿಕ ದುರ್ಬಲ ವರ್ಗಕ್ಕೆ ಸೇರಿಸಿ ಮೀಸಲಾತಿ ನೀಡಲಾಗುವುದು. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
2 ಸಿ ಅಡಿ ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ ಮತ್ತು 2 ಡಿ ಅಡಿ ಲಿಂಗಾಯತರಿಗೆ ಶೇ.7ರಷ್ಟು ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಬಸವರಾಜು ಹೇಳಿದ್ದಾರೆ.


