ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅದ್ಯಕ್ಷ ತಾಜುದ್ದೀನ್ ಶರೀಫ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ತಾಜುದ್ದೀನ್ ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.4 ಮೀಸಲಾತಿಯನ್ನು ಕಿತ್ತು ಇನ್ನೊಂದು ಸಮುದಾಯಕ್ಕೆ ಹಂಚುವ ಮೂಲಕ ಸಮುದಾಯಗಳ ನಡುವೆ ದ್ವೇಷದ ಬೀಜ ಬಿತ್ತಿ ಮತ ಗಳಿಸುವ ಹುನ್ನಾರ ಮಾಡಿದೆ ಎಂದು ಟೀಕಿಸಿದ್ದಾರೆ.
ಇದೊಂದು ಅಸಾಂವಿಧಾನಿಕವಾಗಿದೆ ಮತ್ತು ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದೆ. ಬಿಜೆಪಿ ತನ್ನ ಕೋಮುವಾದಿತನವನ್ನು ಪದೇ ಪದೇ ಪ್ರದರ್ಶಿಸುತ್ತಲೇ ಇದೆ. ಬರುವ ಚುನಾವಣೆಯಲ್ಲಿ ಇದರ ಕಾವು ಬಿಜೆಪಿಗೆ ತಟ್ಟದೇ ಇರದು ಎಂದು ಹೇಳಿದ್ದಾರೆ.
ಜಾತ್ಯತೀತ ನೆಲೆಗಟ್ಟಿನ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ಮಟ್ಟಕ್ಕೆ ಇಳಿದಿರುವುದು ಅತ್ಯಂತ ಘೋರ ದುರಂತವಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಾ ಸಮುದಾಯದ ಹಿತ ಕಾಯುವ ಮುಖ್ಯಮಂತ್ರಿ ಎನ್ನುವ ಅಭಿಪ್ರಾಯಕ್ಕೆ ಬಸವರಾಜ ಬೊಮ್ಮಾಯಿ ತಿಲಾಂಜಲಿ ಇಟ್ಟಿದ್ದಾರೆ. ಬಿಜೆಪಿಯ ಕೋಮುದ್ವೇಷ ಈ ತೀರ್ಮಾನದಲ್ಲಿ ಎದ್ದು ಕಾಣುತ್ತದೆ ಎಂದು ಆರೋಪಿಸಿದ್ದಾರೆ.
ಕೂಡಲೇ ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ನಿರ್ಧಾರ ಕೈಬಿಡಬೇಕು. ಮತಬ್ಯಾಂಕ್’ಗಾಗಿ ಓಲೈಕೆ ರಾಜಕಾರಣ ಮಾಡಬಾರದು. ಮುಸ್ಲಿಮರ 2ಬಿ ಮೀಸಲಾತಿ ಯಥಾವತ್ತಾಗಿ ಮುಂದುವರೆಸಬೇಕು ಎಂದು ಆಗ್ರಹಿಸಿದ್ದಾರೆ.


