ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ ಎಂದು ಪಂಚಮಸಾಲಿ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮಿಗಳು ಹೇಳಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪಂಚಮಸಾಲಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ವಿಜಯಾನಂದ ಕಾಶಪ್ಪನವರ್ ರಾಜಿನಾಮೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮೃತ್ಯುಂಜಯ ಸ್ವಾಮಿಗಳ ಪಕ್ಕವೇ ಕುಳಿತಿದ್ದ ವಿಜಯಾನಂದ ಕಾಶಪ್ಪನವರ್ ಕೂಡಲೇ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡು ಸ್ವಾಮೀಜಿ ಮತ್ತು ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.
ನಾನು ಯಾವುದೇ ಕಾರಣಕ್ಕೂ ಸರ್ಕಾರದ ನಿರ್ಧಾರ ಒಪ್ಪಿಕೊಳ್ಳುವುದಿಲ್ಲ. ಪಂಚಮಸಾಲಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ಪರ ವಿರೋಧ ಮಾತುಗಳು ಕೇಳಿಬಂದು ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಮಾತಿನ ಚಕಮಿ ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತು. ಈ ಮಧ್ಯೆ ವಿಜಯಾನಂದ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ನಡೆಯಿತು ಎಂದು ಈದಿನ.ಕಾಂ ವರದಿ ಮಾಡಿದೆ.
ಸ್ವಾಮೀಜಿ ಮತ್ತು ಸರ್ಕಾರದ ನಿರ್ಧಾರಕ್ಕೆ ವಿಜಯಾನಂದ ಕಾಶಪ್ಪನವರ್ ವಿರೋಧ ವ್ಯಕ್ತಪಡಿಸಿ ನಾವು ಕೇಳಿರುವುದು ಶೇ.15ರಷ್ಟು ಮೀಸಲಾತಿ. ಆದರೆ ಸರ್ಕಾರ ಶೇ.7ರಷ್ಟು ನೀಡಿದೆ. ಇದು ಚುನಾವಣಾ ತಂತ್ರ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೇರೆ ಸಮುದಾಯದಿಂದ ಕಿತ್ತುಕೊಂಡು ನಮಗೆ ಮೀಸಲಾತಿ ಕೊಡುವುದು ಬೇಕಾಗಿಲ್ಲ. ನಮಗೆ ಕೇವಲ ಶೇ.2 ಮಾತ್ರ ಮೀಸಲಾತಿ ಸಿಕ್ಕಂತಾಗಿದೆ. ಮುಸ್ಲೀಮರ ಮೀಸಲಾತಿಯನ್ನು ಕಸಿದು ನಮಗೆ ಕೊಟ್ಟಿದ್ದಾರೆ. ಆ ಮೂಲಕ ಮುಸ್ಲಿಮರು ಮತ್ತು ನಮ್ಮ ನಡುವೆ ಜಗಳ ತಂದಿಡುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.


