ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಡೆಸಿದ ಮೂರು ಸಮೀಕ್ಷೆಗಳ 130 ರಿಂದ 140 ಸ್ಥಾನಗಳನ್ನು ನೀಡಿವೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಾನು ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿದ್ದು, ಜನರ ನಾಡಿಮಿಡಿತ ನನಗೆ ತಿಳಿದಿದೆ. ಕರ್ನಾಟಕದ ಎಲ್ಲಾ ಸಂಸದರ ಸಹಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಲಿಂಗಾಯತರ ನಾಯಕ ಪುನರುಚ್ಚರಿಸಿದ್ದಾರೆ. ಮುಂದಿನ 2-3 ದಿನಗಳಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಪ್ರವಾಸ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.
ಈ ಸಂಬಂಧ ನಾನು ಈಗಾಗಲೇ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ನಮ್ಮ ಎಲ್ಲಾ ಸಂಸದರು ತಮ್ಮ ತಮ್ಮ ಜಿಲ್ಲೆಗಳಲ್ಲಿಯೇ ಇರುತ್ತಾರೆ. ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಲು ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಯಾರೂ ಪಕ್ಷ ಬಿಡುವುದಿಲ್ಲ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ಸರ್ಕಾರ ಮುಸ್ಲಿಮರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಜನರನ್ನು ದಾರಿ ತಪ್ಪಿಸಬಾರದು, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಮೀಸಲಾತಿ ಕುರಿತು ಬಂಜಾರರು ನಡೆಸಿದ ಪ್ರತಿಭಟನೆಯ ಬಗ್ಗೆ ಮಾತನಾಡಿದ ಅವರು, ನಾವು ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಕೆಲವು ತಪ್ಪ ತಿಳುವಳಿಕೆ ಇರಬಹುದು. ರಾಜ್ಯದೆಲ್ಲೆಡೆ ಎಲ್ಲರೂ ಖುಷಿಯಾಗಿದ್ದಾರೆ. ಒಂದೋ ಎರಡೋ ಕಡೆ ಮಾತ್ರ ಇಂತಹ ಘಟನೆಗಳು ನಡೆದಿವೆ ಎಂದರು.
ಟಿಕೆಟ್ ಹಂಚಿಕೆ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು. ನಮ್ಮ ವರದಿಗಳ ಆಧಾರದ ಮೇಲೆ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು. ಟಿಕೆಟ್ ನೀಡದವರು ಪಕ್ಷಕ್ಕಾಗಿ ಕೆಲಸ ಮಾಡುತ್ಥಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಸರಿಸಾಟಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ಅವರಲ್ಲಿ ಕೆಲವರು ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ. ಇದು ಆಗುವುದಿಲ್ಲ. ಕಾಂಗ್ರೆಸ್ 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.


