ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ನ್ಯಾಯಾಲಯದ ಮುಂಭಾಗ ಪಶ್ಚಾತಾಪ ಸತ್ಯಾಗ್ರಹ ಮಾಡಿ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರ ಇದ್ದರೆ ರಾಜ್ಯಕ್ಕೆ ಒಳಿತೆಂದು ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ತಂದೆವು. ಆದರೆ ಬಿಜೆಪಿ ಪರಮ ಭ್ರಷ್ಟ ಸರ್ಕಾರವಾಗಿದೆ. ಇಂತಹ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ. ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ವಿಧಾನಪರಿಷತ್ ಸದಸ್ಯ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ ಎಂದು ವಿಶ್ವನಾಥ್ ಸ್ಪಷ್ಟಪಡಿಸಿದರು.


