ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿಲ್ಲ. ಆದರೆ ಮಾಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದವರ ಪರ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಷ್ಟದ ದಿನಗಳಲ್ಲಿ ನನ್ನ ಜೊತೆ ನಿಂತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಕನ್ನಡ ಚಿತ್ರರಂಗಕ್ಕೆ ಬಂದಾಗ ಕೆಲವೇ ಕೆಲವರು ನನ್ನ ಪರ ನಿಂತಿದ್ದರು. ಅಂತಹವರು ನನ್ನ ಮಾಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು.
ನನ್ನ ಜೀವನದಲ್ಲಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಸ್ಥಾನದಲ್ಲಿದ್ದಾರೆ. ಅವರು ಎಲ್ಲಿ ಹೇಳುತ್ತಾರೋ ಅಲ್ಲಿ ಕೆಲಸ ಮಾಡಲು ಸಿದ್ದನಿದ್ದೇನೆ. ಒಬ್ಬ ತಂದೆಯ ಮಾತು ಕೇಳುವ ರೀತಿ ಅವರ ಮಾತು ಕೇಳುತ್ತೇನೆ. ಪಕ್ಷ ಕರೆದಿರೋದು ನನಗೆ ಗೊತ್ತಿಲ್ಲ. ಬೊಮ್ಮಾಯಿ ಬೇರೆ ಪಕ್ಷದಲ್ಲಿದ್ದರೂ ಅವರ ಜೊತೆ ನಾನು ನಿಲ್ಲುತ್ತಿದ್ದೆ. ನಾನು ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿಷಯದಲ್ಲಿ ಪಕ್ಷ ನೋಡುತ್ತಿಲ್ಲ. ವ್ಯಕ್ತಿ ನೋಡುತ್ತೇನೆ ಎಂದು ಹೇಳಿದರು.
ನನಗೆ ಎಲ್ಲಾ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗುವುದಿಲ್ಲ. ಪಕ್ಷ ಅಂತ ಇಲ್ಲಿಗೆ ಬಂದಿಲ್ಲ. ವ್ಯಕ್ತಿಯ ಕಾಳಜಿಗೆ ಬಂದಿದ್ದೇನೆ. ಹಣಕ್ಕಾಗಿ ನಾನು ಚುನಾವಣಾ ಪ್ರಚಾರ ಮಾಡುತ್ತಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನನಗೆ ಸಂಪೂರ್ಣ ಬೆಂಬಲ ನೀಡಲಿರುವ ಕಿಚ್ಚ ಸುದೀಪ್ –
ಹೆಸರಾಂತ ಚಿತ್ರನಟ ಕಿಚ್ಚ ಸುದೀಪ್ ಅವರು ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ, ನನಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿರುವುದನ್ನು ನಾನು ಸ್ವಾಗತಿಸುತ್ತೇನೆ, ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಅವರನ್ನು ನಮ್ಮ ಪಕ್ಷದ ಪರ ಪ್ರಚಾರಕ್ಕೆ ಸಂಪೂರ್ಣವಾಗಿ ಬಳಸಿಕೊಂಡು, ಅವರ ಶಕ್ತಿಯನ್ನು ಸದ್ಭಳಕೆ ಮಾಡಿಕೊಳ್ಳುತ್ತೇವೆ. ಇದೇ ಸಂದರ್ಭಸಲ್ಲಿ ಸುದೀಪ ಅವರ ತಂದೆ-ತಾಯಿಯವರಿಗೆ ಸಹ ಗೌರವಪೂರ್ವಕ ನಮನಗಳನ್ನು ಅರ್ಪಿಸುತ್ತೇನೆ ಎಂದರು.


