ಅಥಣಿ ಕ್ಷೇತ್ರದ ಟಿಕೆಟ್ ವಂಚಿತ ಮಾಜಿ ಸಚಿವ ಲಕ್ಷ್ಮಣ್ ಸವದಿ ನಾಳೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಮತ್ತು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬಳಿಕ ಆ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದರಿಂದ ಬೇಸರಗೊಂಡಿರುವ ಸವದಿ ಯಾವ ಕಾರಣಕ್ಕೆ ನನಗೆ ಟಿಕೆಟ್ ನೀಡಿಲ್ಲ ಎಂಬ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಟಿಕೆಟ್ ನೀಡದಿರುವುದಕ್ಕೆ ತೀವ್ರ ಬೇಸರವಾಗಿದೆ. ನಾನು ಏನು ತಪ್ಪು ಮಾಡಿದ್ದೇನೆ ಎಂಬುದನ್ನು ತಿಳಿಸದೆ ಈ ತೀರ್ಮಾನಕ್ಕೆ ಬರಲಾಗಿದೆ. ನನಗೆ ಟಿಕೆಟ್ ಲಭ್ಯವಾಗದೇ ಇರುವುದು ನೋವು ತಂದಿದೆ. ಹೀಗಾಗಿ ಇಂದು ಸಂಜೆ ನನ್ನ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿಯ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಚಿವ ಲಕ್ಷ್ಮಣ ಸವದಿ ನನ್ನ ಪಕ್ಷದ ಮುಖಂಡರೇ ನನಗೆ ಟಿಕೆಟ್ ಸಿಗದಂತೆ ನೋಡಿಕೊಂಡರು. ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಇದರಿಂದ ನನಗೆ ಬಹಳ ಬೇಸರವಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್, ಜೆಡಿಎಸ್ ಮತ್ತು ಇತರೆ ಪಕ್ಷಗಳಿಂದಲೂ ಪಕ್ಷ ಸೇರ್ಪಡೆಗೆ ಆಹ್ವಾನ ಬಂದಿದೆ. ಅಥಣಿ ಮತ್ತು ಬೆಂಗಳುರಿನಲ್ಲಿ ಪ್ರಮುಖರ ಸಭೆ ನಡೆಸಿ ಯಾವ ಪಕ್ಷಕ್ಕೆ ಸೇರಬೇಕು ಎಂಬ ತೀರ್ಮಾನವನ್ನು ತೆಗೆದುಕೊಳ್ಳುತ್ಥೇನೆ. ಅದಕ್ಕೂ ಮೊದಲು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್.ಸಿ ಹುದ್ದೆಗೆ ರಾಜಿನಾಮೆ ನೀಡುವುದು ಖಚಿತ ಎಂದು ಸ್ಪಷ್ಟಪಡಿಸಿದರು.


