ಒಕ್ಕಲಿಗರು ಹಾಗೂ ಲಿಂಗಾಯತರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತಲಾ ಶೇಕಡ 2ರಷ್ಟು ಹೆಚ್ಚಿಸಿ ಮುಸ್ಲೀಮರಿಗೆ ಶೇಕಡ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರ ಮೇಲ್ನೋಟಕ್ಕೆ ದೋಷಪೂರಿತ ಆಗಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠದ ಮುಂದೆ ಮಂಡಿಸಲಾದ ಆಧಾರಗಳಿಂದ ಕರ್ನಾಟಕ ಸರ್ಕಾರದ ತೀರ್ಮಾನ ಸಂಪೂರ್ಣವಾಗಿ ತಪ್ಪಾದ ಊಹೆಯನ್ನು ಆಧರಿಸಿದೆ ಎಂಬುದನ್ನು ತೋರುತ್ತದೆ ಎಂದು ಹೇಳಲಾಗಿದೆ.
ಕರ್ನಾಟಕದ ಮುಸ್ಲಿಂ ಸಮುದಾಯದ ಸದಸ್ಯರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್, ದುಶ್ಯಂತ್ ದವೆ ಮತ್ತು ಗೋಪಾಲ್ ಶಂಕರನಾರಾಯಣ್ ಅವರು ಮುಸ್ಲೀಮರ ಕೋಟಾ ರದ್ದುಗೊಳಿಸಲು ಯಾವುದೇ ಅಧ್ಯಯನ ನಡೆಸಿಲ್ಲ ಮತ್ತು ಯಾವುದೇ ಪ್ರಾಯೋಗಿಕ ಮಾಹಿತಿಯು ಸರ್ಕಾರದ ಬಳಿ ಲಭ್ಯವಿಲ್ಲ ಎಂದು ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಹೇಳಿದರು.
ಕರ್ನಾಟಕದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿಗಳಿಗೆ ಉತ್ತರಗಳನ್ನು ಸಲ್ಲಿಸಲು ಸ್ವಲ್ಪ ಕಾಲಾವಕಾಶ ಕೋರಿದರು ಮತ್ತು ಅರ್ಜಿದಾರರು ಪ್ರಶ್ನಿಸಿರುವ ಮಾರ್ಚ್ 24ರ ಸರ್ಕಾರಿ ಆದೇಶದ ಆಧಾರದ ಮೇಲೆ ಯಾವುದೇ ನೇಮಕಾತಿ ಮತ್ತು ಪ್ರವೇಶಗಳನ್ನು ಮಾಡಲಾಗುವುದಿಲ್ಲ ಎಂದು ಪೀಠಕ್ಕೆ ಭರವಸೆ ನೀಡಿದರು.
ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದವರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಅವಕಾಶ ನೀಡದೆ ಯಾವುದೇ ಮಧ್ಯಂತರ ಆದೇಶ ನೀಡಬಾರದು ಎಂದು ಹೇಳಿದರು.
ಪೀಠವು ಏಪ್ರಿಲ್ 18ರಂದು ಹೆಚ್ಚಿನ ವಿಚಾರಣೆಗೆ ವಿಷಯವನ್ನು ಮುಂದೂಡಿತು ಮತ್ತು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಮೆಹ್ತಾ ಮತ್ತು ರೋಹಟಗಿಗೆ ಸೂಚಿಸಿತು.
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ವಾರಗಳ ಮೊದಲು ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ.


