ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ತೆಲಂಗಾಣ ಬಿಜೆಪಿ ಮುಖಂಡ ತುಳ ವೀರೇಂದ್ರಗೌಡ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬ್ಬ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಈ ರೀತಿಯಾಗಿ ಮಾತನಾಡುವುದು ತರವಲ್ಲ ಎಂದು ಕಿಡಿಕಾರಿದರು.
ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇದು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬರಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಪ್ರವಾಸ ಮಾಡುವರು. ಇದರ ವಿವರಗಳನ್ನು ಶೀಘ್ರವೇ ತಿಳಿಸಲಾಗುವುದು. ಕರ್ನಾಟಕದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ ಬರುವುದರಲ್ಲಿ ಸಂಶಯವಿಲ್ಲ. ನಾವು ನೀಡಿರುವ ಜಾತಿವಾರು ಮೀಸಲಾತಿ ಮತ್ತು ಅಭಿವೃದ್ಧಿ ಪರ ಕೆಲಸಗಳು ಜನತೆಗೆ ಗೊತ್ತಿದೆ. ಅದನ್ನು ಮನವರಿಕೆ ಮಾಡುವ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದರು.
ತೆಲಂಗಾಣ ಮತ್ತೊಬ್ಬ ಮುಖಂಡ ಮನೋಹರ್ ರೆಡ್ಡಿ ಮಾತನಾಡಿ, ನಮ್ಮ ಪಕ್ಷಕ್ಕೆ ಬಹುಮತ ಬರುವುದನ್ನು ಸಹಿಸದೆ ಈ ರೀತಿಯಾದ ಅವಹೇಳನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಜನರು ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ನಮ್ಮ ಪಕ್ಷಕ್ಕೆ ಸಂಪೂರ್ಣ ಸಹಕಾರ ನೀಡಿ ಅತ್ಯಧಿಕ ಮತಗಳನ್ನು ಕೊಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.
ಮಾಧ್ಯಮಗೋಷ್ಟಿಯಲ್ಲಿ ಹೆಬ್ಬಾಕ ರವಿಶಂಕರ್, ಸದಾಶಿವಯ್ಯ, ಹಾಗೂ ಇತರರು ಉಪಸ್ಥಿತರಿದ್ದರು.


