ಪಕ್ಷದ ಅಭ್ಯರ್ಥಿ ಶ್ರೀದೇವಿ ನಾಯಕ್ ಅವರನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಿಕೊಡುವಂತೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜನರ ಪರವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಗುತ್ತಿಗೆದಾರರ ಸಂಘದವರು ಪ್ರಧಾನಿಗಳಿಗೆ ಪತ್ರ ಬರೆದು ರಾಜ್ಯ ಬಿಜೆಪಿ ಸರ್ಕಾರದ ಕಮಿಷನ್ ಹಾವಳಿಯಿಂದ ನಮ್ಮನ್ನು ಕಾಪಾಡಿ ಎಂದು ಮನವಿ ಮಾಡಿದ್ದಾರೆ ಎಂದರು.
ಸರ್ಕಾರಿ ಕಾಮಗಾರಿಗಳಿಗೆ 40%, 50% ಲಂಚ ನಿಗದಿ ಮಾಡಿದ್ದರಿಂದ ವಿಧಾನಸೌಧದ ಗೋಡೆಗಳು ಇಂದು ಲಂಚ, ಲಂಚ ಎಂದು ಪಿಸುಗುಟ್ಟುತ್ತಿವೆ ಎಂದು ಆರೋಪಿಸಿದ್ದಾರೆ.
ಈ ಬಾರಿ ಮತ ಚಲಾಯಿಸುವ ಮುನ್ನ ಬಿಜೆಪಿಯ ಕಮಿಷನ್ ದುರಾಸೆಗೆ ಬಲಿಯಾದ ಅಮಾಯಕ ಜೀವಗಳನ್ನು ಮರೆಯದಿರಿ ಎಂದು ಮನವಿ ಮಾಡಿದ್ದಾರೆ.


