ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ ಹಾಗೂ ಪಿಎಫ್ಐ ಕಪಿಮುಷ್ಟಿಯಲ್ಲಿದ್ದು, ಅದರಿಂದ ಹೊರಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ವರ್ತಿಸುತ್ತಿದೆ ಅವರ ಒತ್ತಡಕ್ಕೆ ಮಣಿಯುತ್ತಿದ್ದಾರೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದರು.
ಪಿಎಫ್ಐ ಬ್ಯಾನ್ ಆಗಿದ್ದರೂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂಬ ಅಸಮಾಧಾನ ಪಿಎಫ್ಐಗಿದೆ. ನಮಗೆ ರಕ್ಷಣೆ ಕೊಡುತ್ತಿಲ್ಲ. ನಾವು ಯಾಕೆ ನಿಮಗೆ ರಕ್ಷಣೆ ಕೊಡಬೇಕು ಅಂತ ಪಿ.ಎಫ್.ಐ ನಾಯಕರು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.
ಪಿ.ಎಫ್.ಐ. ನ ಇನ್ನೊಂದು ರೂಪ ಎಸ್.ಡಿ.ಪಿ.ಐ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತು. ಆದರೆ ಅವರು ಕೊಡುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ನ ಕಾಲದಲ್ಲಿ ಎಸ್.ಡಿ.ಪಿ.ಐ, ಪಿ.ಎಫ್.ಐ ಪ್ರಬಲವಾಗಿ ಬೆಳೆದಿದ್ದವು ಎಂದರು.
ಭಜರಂಗ ದಳಕ್ಕೆ ಆಂಜನೇಯನಿಗೆ ಏನು ಸಂಬಂಧ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿ, ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ. ಆಂಜನೇಯನಿಗೂ ಭಜರಂಗ ದಳಕ್ಕಿದೆ. ಇದನ್ನು ಕಾಂಗ್ರೆಸ್ ಮುಖಂಡರು ಅರ್ಥ ಮಾಡಿಕೊಳ್ಳಬೇಕು. ಜನರ ಭಾವನೆಗಳ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲ ಎಂದು ಸಿಟ್ಟು ಹೊರಹಾಕಿದರು.


