ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳುತ್ತಿದ್ದು, ಇದೀಗ ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಬೆಟ್ಟಿಂಗ್ಗೆ ತನ್ನ ಜಮೀನನ್ನೇ ಮಾರಾಟ ಮಾಡಲು ಮುಂದಾಗಿರುವ ಪ್ರಸಂಗ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ ಜಮೀನು ಮಾರಲು ಮುಂದಾದ ಕಾಂಗ್ರೆಸ್ ಮುಖಂಡ.
ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಕೆ.ವೆಂಕಟೇಶ್ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.
ಈ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂದು 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ನಡೆದಿದೆ. ಸದ್ಯ ಯೋಗೇಶ್ ಗೌಡ ಮಾತನಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತುಮಕೂರು ಜಿಲ್ಲೆಯಲ್ಲೂ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬ ಬಗ್ಗೆ ಬೆಟ್ಟಿಂಗ್ ನಡೆದಿದೆ. ಪಾವಗಡ, ಮಧುಗಿರಿ, ಕುಣಿಗಲ್ ಮತ್ತು ತುಮಕೂರಿನಲ್ಲೂ ಬೆಟ್ಟಿಂಗ್ ಕಟ್ಟಿದ್ದಾರೆ ಎನ್ನಲಾಗಿದೆ.


