ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು ಬಿಜೆಪಿ ಸರ್ಕಾರದ ಎಂಟು ಮಂದಿ ಪ್ರಭಾವಿ ಸಚಿವರು ಪರಾಭವಗೊಂಡಿದ್ದಾರೆ.
ಚಾಮರಾಜನಗರ ಮತ್ತು ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದ ವಸತಿ ಸಚಿವ ವಿ.ಸೋಮಣ್ಣ ಅವರು ಎರಡೂ ಕ್ಷೇತ್ರಗಳಲ್ಲಿ ಸೋಲನ್ನು ಕಂಡಿದ್ದಾರೆ.


ತುಮಕೂರು ಜಿಲ್ಲೆಯ ಇಬ್ಬರು ಸಚಿವರು ಸೋಲು ಕಂಡಿದ್ದಾರೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿ ಸಣ್ಣ ನೀರಾವರಿ ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿ ಹಾಗೂ ತಿಪಟೂರು ಕ್ಷೇತ್ರದಿಂದ ಗೆದ್ದು ಪ್ರಾಥಮಿಕ ಶಿಕ್ಷಣ ಸಚಿವರಾಗಿದ್ದ ಬಿ.ಸಿ.ನಾಗೇಶ್ ಈ ಬಾರಿಯ ಚುನಾವಣೆಯಲ್ಲಿ ಮತದಾರರು ಇಬ್ಬರು ಸಚಿವರನ್ನು ಮನೆ ಕಳಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಆಯ್ಕೆಯಾಗಿ ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಸೋಲು ಕಂಡಿದ್ದಾರೆ. ಅಷ್ಟೇ ಅಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ 15 ಶಾಸಕರಲ್ಲಿ ಎಂ.ಟಿ.ಬಿ.ನಾಗರಾಜ್, ಕೆ.ಸುಧಾಕರ್, ಭೈರತಿ ಬಸವರಾಜ್, ಬಿ.ಸಿ.ಪಾಟೀಲ್ ಅವರಿಗೆ ಮತದಾರಪ್ರಭುಗಳು ಸೋಲುಣಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಹೊಂದಿದ್ದ ಗೋವಿಂದ ಕಾರಜೋಳ, ಶ್ರೀರಾಮಲು ಸೋತಿದ್ದು, ಆರ್.ಆರ್.ನಗರ ಕ್ಷೇತ್ರದಿಂದ ಸಚಿವರಾಗಿದ್ದ ಮುನಿರತ್ನಂ ಹಿನ್ನಡೆ ಸಾಧಿಸಿದ್ದಾರೆ.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ಆರ್.ಅಶೋಕ್ ಕನಕಪುರದಲ್ಲಿ ಸೋತಿದ್ದಾರೆ. ರೇಣುಕಾಚಾರ್ಯ ಕೂಡ ಸೋತಿದ್ದಾರೆ.


