ನನ್ನ ಬಳಿ ನಂಬರ್ ಇಲ್ಲ. ಆದರೆ ನನ್ನ ಅಧ್ಯಕ್ಷತೆಯಲ್ಲಿ ಗೆದ್ದಿರುವ 135 ಶಾಸಕರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಯಾವುದೇ ನಂಬರ್ ಇಲ್ಲ. ಆದರೆ ನನ್ನ ಅಧ್ಯಕ್ಷತೆಯಲ್ಲಿ ಆಯ್ಕೆಯಾಗಿರುವ 135 ಶಾಸಕರಿದ್ದಾರೆ ಎಂದು ಹೇಳಿದ್ದಾರೆ.
ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಆಯ್ಕೆ ಮಾಡುವುದು ಹೈಕಮಾಂಡ್ ಗೆ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ನಾನು ಏಕಾಂಗಿಯಾಗಿದ್ದೇನೆ. ಹಲವು ಸವಾಲುಗಳನ್ನು ಎದುರಿಸಿದ್ದೇನೆ. ನಾನು ಜೈಲಲ್ಲಿ ಇದ್ದಾಗ ಸೋನಿಯಾ ಗಾಂಧಿ ನನ್ನ ಹೆಗಲಿಗೆ ಪಕ್ಷದ ಜವಾಬ್ದಾರಿಯನ್ನು ವಹಿಸಿದ್ದರು. ಅದನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ ಎಂದಿದ್ದಾರೆ.
ಇಂದು ನನ್ನ ಹುಟ್ಟು ಹಬ್ಬ. ವೈಯಕ್ತಿಕ ಕಾರ್ಯಕ್ರಮಗಳಿವೆ. ಈ ಹಿನ್ನೆಲೆಯಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಬೇಕಿದೆ. ನಂತರ ದೆಹಲಿಗೆ ತೆರಳಲಿದ್ದೇನೆ ಎಂದು ಹೇಳಿದ್ದಾರೆ.


