ಕರ್ನಾಟಕದ ಮುಖ್ಯಮಂತ್ರಿ ನೇಮಕ ಸಂಬಂಧ ಚರ್ಚೆ ನಡೆಸಲು ಹೈಕಮಾಂಡ್ ದೆಹಲಿಗೆ ಬರುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬುಲಾವ್ ನೀಡಿದೆ. ಆದರೂ ದೆಹಲಿಗೆ ತೆರಳದ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಇದ್ದುಕೊಂಡೇ ಮುಖ್ಯಮಂತ್ರಿಯಾಗಲು ದಾಳಗಳನ್ನು ಉರುಳಿ ಬಿಡುತ್ತಿದ್ದಾರೆ.
ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಶಾಸಕರನ್ನು ಕರೆದುಕೊಂಡು ದೆಹಲಿಗೆ ತೆರಳಿದ್ದಾರೆ. ಜಮೀರ್ ಅಹಮದ್ ಸೇರಿದಂತೆ ಕೆಲವು ಶಾಸಕರೂ ದೆಹಲಿಗೆ ಹೋಗಿದ್ದಾರೆ.
ಆದರೆ ಡಿ.ಕೆ.ಶಿವಕುಮಾರ್ ತಮ್ಮ ಹುಟ್ಟುಹಬ್ಬದ ನೆಪವನ್ನು ಮುಂದುಮಾಡಿ ದೆಹಲಿಗೆ ತೆರಳದೆ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದು, ಮಾಧ್ಯಮಗೋಷ್ಠಿಯನ್ನು ನಡೆಸಿದರು. ನನ್ನ ಬಳಿ ನಂಬರ್ ಗಳಿಲ್ಲ. ಆದರೆ ನನ್ನ ಅಧ್ಯಕ್ಷತೆಯಲ್ಲಿ 135 ಶಾಸಕರು ಆಯ್ಕೆಯಾಗಿದ್ದಾರೆ ಎನ್ನುವ ಮೂಲಕ ತಾನು ಮುಖ್ಯಮಂತ್ರಿ ಗಾದಿಗೆ ಪ್ರಬಲ ಆಕಾಂಕ್ಷಿ ಎಂಬುದನ್ನು ಸಾರಿದ್ದಾರೆ.
ಕಷ್ಟಕಾಲದಲ್ಲಿ ಸೋನಿಯಾಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದರು. ಒಬ್ಬಂಟಿಯಾಗಿಯೇ ಅಧ್ಯಕ್ಷ ಹುದ್ದೆಯನ್ನು ನಿಭಾಯಿಸಿಕೊಂಡು ಬಂದಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾದವರೇ ಮುಖ್ಯಮಂತ್ರಿಯಾಗಿದ್ದಾರೆ. ಹಾಗಾಗಿ ನನಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.
ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಲ್ ಪಿ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಹೈಕಮಾಂಡ್ ಗೆ ಬಿಡಲು ತೀರ್ಮಾನಿಸಲಾಗಿದೆ. ಈ ವಿಷಯವನ್ನು ಪ್ರಸ್ತಾಪಿಸಿರುವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಡೆದುಕೊಂಡು ಬರುತ್ತಿರುವ ಹಳೆಯ ಸಂಪ್ರದಾಯವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನೊಂದು ಕಡೆ ಸಿದ್ದರಾಮಯ್ಯ ಅವರು ಕೂಡ ಮುಖ್ಯಮಂತ್ರಿ ಹುದ್ದೆಗಾಗಿ ತೀವ್ರ ಕಸರತ್ತು ನಡೆಸಿದ್ದಾರೆ. ತನ್ನ ಆಪ್ತರೊಂದಿಗೆ ದೆಹಲಿಯನ್ನು ತಲುಪಿರುವ ಸಿದ್ದರಾಮಯ್ಯ ಕೂಡ ಒಂದೊಂದೇ ದಾಳಗಳನ್ನು ಉರುಳಿ ಬಿಡುತ್ತಿದ್ದಾರೆ. ಹೀಗಾಗಿ ಉಭಯ ನಾಯಕರು ಮುಖ್ಯಮಂತ್ರಿ ಆಗಲು ಪಟ್ಟು ಹಿಡಿದಿರುವುದು ಬಿಕ್ಕಟ್ಟನ್ನು ಸೃಷ್ಟಿ ಮಾಡಿದೆ.
ಮುಂದಿನ ವರ್ಷ ಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಹೈಕಮಾಂಡ್ ನಾಯಕರ ಮುಂದಿರುವ ಸವಾಲಾಗಿದೆ. ಯಾರಿಗೆ ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಟ್ಟರೆ ಲೋಕಸಭೆ ಚುನಾವಣೆಯಲ್ಲಿ ಲಾಭವಾಗಲಿದೆ ಎಂಬ ಬಗ್ಗೆ ಪಕ್ಷದ ಹೈಕಮಾಂಡ್ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕೆ.ಈ.ಸಿದ್ದಯ್ಯ


