ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಶಾಸಕ, ಹಿರಿಯ ನಾಯಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಲಿಂಗಾಯತ ಪಂಚಮಸಾಲಿ ಜನಾಂಗದ ನಾಯಕರಾಗಿರುವ ಕಾಶಪ್ಪನವರ್ ಗೆ ಅವಕಾಶ ಕಲ್ಪಿಸುವ ಮೂಲಕ ಬಾಗಲಕೋಟೆ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಇಳಕಲ್ ತಾಲ್ಲೂಕು ಲಿಂಗಾಯತ ಪಂಚಮಸಾಲಿ ಅಧ್ಯಕ್ಷ ಮಹಾತಗೌಡ ಪಾಟೀಲ, ಹುನಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾದರ ದೊಡ್ಡಮನಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ನಡೆದ ಹೋರಾಟದಿಂದ ಬಾಗಲಕೋಟೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧ್ಯವಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿರುವ ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಹೇಳಿದ್ದಾರೆ.
ವಿಜಯಾನಂದ ಕಾಶಪ್ಪನವರ್ ಹುನಗುಂದ ಕ್ಷೇತ್ರದಿಂದ 2 ನೇ ಬಾರಿ ಆಯ್ಕೆಯಾಗಿದ್ದಾರೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾಗಿ, ರಾಜ್ಯದಾದ್ಯಂತ 700 ಕಿ.ಮೀ ಪಾದಯಾತ್ರೆ ಮಾಡಿ ಪಂಚಮಸಾಲಿ ಸಮುದಾಯವನ್ನು ಸಂಘಟನೆ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಅವರ ಕೊಡುಗೆ ಹೆಚ್ಚಿದ್ದು, ಎನ್ಆರ್ಸಿ, ಸಿಆರ್ಎನ್ ರದ್ದಿಗಾಗಿ ಇಳಕಲ್ ನಿಂದ ಬಿಜಾಪುರ ವರೆಗೆ ಪಾದಯಾತ್ರೆ ಮಾಡಿದ್ದಾರೆ. ಜನಪರ ಹೋರಾಟಗಾರನಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.


