ಚುನಾವಣಾ ಸಮಯದಲ್ಲಿ ಜನರಿಗೆ ನೀಡಿರುವ ಐದು ಗ್ಯಾರೆಂಟಿ ಯೋಜನೆಗಳನ್ನು ಮುಂದಿನ ಸಂಪುಟ ಸಭೆಯ ಬಳಿಕ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ಸಭೆಯಲ್ಲಿ ಐದು ಗ್ಯಾರೆಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಳನ್ನು ಮುಂದಿನ ಸಚಿವ ಸಂಪುಟ ಸಭೆಯ ಬಳಿಕ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗಳಿಗೆ ತಗಲುವ ವೆಚ್ಚವನ್ನು ನೀಡುತ್ತೇನೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ರೂಪಾಯಿ ನೀಡಲಾಗುವುದು. 200 ಯೂನಿಟ್ ವರೆಗಿನ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದರು.
ರಾಜ್ಯದ ಮಹಿಳೆಯರಿಗೆ ಮಾತ್ರ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು. ಒಟ್ಟು ಐದು ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ ಸುಮಾರು 50 ಸಾವಿರ ಕೋಟಿ ಖರ್ಚಾಗಲಿದೆ ಎಂದು ಮಾಹಿತಿ ನೀಡಿದರು.
ನಿರುದ್ಯೋಗಿಗಳಿಗೆ ಮಾಸಿಕ 3000 ರೂಗಳನ್ನು ಎರಡು ವರ್ಷದವರೆಗೆ ನೀಡಲಾಗುತ್ತದೆ. ಡಿಪ್ಲೊಮಾ ಪೂರೈಸಿದವರಿಗೆ 1500 ರೂಗಳನ್ನು ನೀಡಲಾಗುವುದು ಎಂದರು.
ಬಿಪಿಎಲ್ ಕಾರ್ಡುದಾರರಿಗೆ ಇನ್ನು ಮುಂದೆ ಒಬ್ಬರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು. ಇದರ ಜೊತೆಗೆ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.


