ಬೆಂಗಳೂರಿನಲ್ಲಿ ನಡೆದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿಯೇತರ ನಾಯಕರು ಭಾಗಿಯಾಗುವ ಮೂಲಕ ನಾಲ್ಕನೇ ರಂಗ ರಚನೆಗೆ ಮುನ್ನುಡಿ ಬರೆದಿದ್ದಾರೆ.
2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಾಲ್ಕನೇ ರಂಗ ರಚಿಸಲು ಬಿಜೆಪಿಯೇತರ ಪಕ್ಷಗಳು ತೀರ್ಮಾನ ಕೈಗೊಂಡಿದ್ದು ಈ ಕುರಿತು ದೇಶವ್ಯಾಪಿ ಚರ್ಚೆಗಳು ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿಯೇತರ ಪಕ್ಷಗಳ ನಾಯಕರು ಕಾಂಗ್ರೆಸ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿ ಆಗುವ ಮೂಲಕ ನಾಲ್ಕನೇ ರಂಗ ರಚನೆಯ ವಿಷಯ ಮುನ್ನೆಲೆಗೆ ಬಂದಿದೆ.
ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫೆರೆನ್ಸ್, ಎನ್.ಸಿ.ಪಿ, ಎಸ್.ಪಿ, ಆರ್ ಜೆಡಿ, ಡಿಎಂಕೆ, ಜೆಡಿಯು ನಾಯಕರು ಭಾಗಿಯಾಗಿರುವುದು ನಾಲ್ಕನೇ ರಂಗ ರಚನೆಗೆ ಪುಷ್ಟಿ ಬಂದಂತಾಗಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ನಾಯಕ ಡಿ.ರಾಜಾ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ನಟ ಕಮಲ ಹಾಸನ್,
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಹಾರದ ಆರ್.ಜೆ.ಡಿ ನಾಯಕ ತೇಜಸ್ವಿ ಯಾದವ್, ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಭಾಗಿಯಾಗಿದ್ದು 2024ರ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಸ್ಪರ್ಧಿಸಲು ಸಿದ್ದತೆಗಳನ್ನು ಕೈಗೊಂಡಿದ್ದಾರೆ ಎಂಬ ಸಂದೇಶವನ್ನು ಈ ಸಮಾರಂಭದ ಮೂಲಕ ರವಾನಿಸಿದ್ದಾರೆ.


